ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯ ಸರಕಾರವು ಬಡ ಹಾಗೂ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಇವುಗಳಿಂದ ಜನರ ಬದುಕಿನಲ್ಲಿ ಬೆಳಕು ಮೂಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಅವರು ಮಂಗಳವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ಹುಬ್ಬಳ್ಳಿ-ಧಾರವಾಡಕ್ಕೆ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವುದರಿಂದ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಬಸ್ಗಳ ವ್ಯವಸ್ಥೆಯಾಗಬೇಕು. ಹಳ್ಳಿಗಳಲ್ಲಿಯೂ ಬಸ್ ಸಂಚಾರದ ವ್ಯವಸ್ಥೆಯನ್ನು ಸರಿಯಾಗಿ ಮಾಡಿ. ಯಾರಿಗೂ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬಗಳು, ಜೋತು ಬಿದ್ದ ತಂತಿಗಳು ಬೆಂಡು ಆಗಿರುವ ಕಂಬಗಳು ಇದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೊಂದರೆ ಆಗುತ್ತಿದೆ. ಹೆಸ್ಕಾಂ ಅಧಿಕಾರಿಗಳು ಈ ಕುರಿತು ಗಮನಹರಿಸಿ ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಹೇಳಿದರು.
ಯುವನಿಧಿ ಯೋಜನೆಯು ಎಷ್ಟು ಜನರಿಗೆ ಉಪಯೋಗವಾಗಿದೆ, ಅದರಿಂದ ಎಷ್ಟು ಜನರಿಗೆ ಕೆಲಸ ಹುಡುಕುವುದಕ್ಕೆ ಸಹಾಯಕವಾಗಿದೆ ಎಂದು ವರದಿ ತಯಾರಿಸಿ, ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಬಸವಂತ ಪಿ.ಎಸ್. ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ ಸಭೆಗೆ ಅಂಕಿಸಖ್ಯೆಗಳ ವಿವರ ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ, ಸುಧೀರ ಗೋಳಾರ, ಅಬ್ದುಲ್ ರಶೀದ್ ಬೋಳಾಬಾಯಿ, ರತ್ನಾ ತೇಗೂರಮಠ ಅವರು ಸಭೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಸದಸ್ಯರು ಭಾಗವಹಿಸಿದ್ದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಅನ್ನ ಭಾಗ್ಯ, ಯುವ ನಿಧಿ ಯೋಜನೆಗಳ ಬಾಕಿ ಫಲಾನುಭವಿಗಳಿಗೆ ಪರಿಶೀಲಿಸಿ ಆದಷ್ಟು ಬೇಗ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.