ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರು ಮಾತನಾಡಿ, ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಹಬ್ಬವಲ್ಲ. ಅದು ಕರ್ನಾಟಕದ ಅತಿ ದೊಡ್ಡ ಧಾರ್ಮಿಕ ಹಾಗೂ ಪಾರಂಪರಿಕ ಹಿಂದೂಗಳ ಹಬ್ಬವಾಗಿದೆ. ಇಂತಹ ಪವಿತ್ರ ಹಬ್ಬದ ಉದ್ಘಾಟನೆ ಮಾಡುವ ಅತಿಥಿಗಳು ದೇವಿಯ ಮೇಲೆ ಶ್ರದ್ಧೆ, ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಆದರೆ ಬಾನು ಮುಸ್ತಾಕ್ ಅವರು ಹಿಂದಿನ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದು, ದತ್ತಪೀಠ ಹೋರಾಟದ ಸಂದರ್ಭದಲ್ಲೂ ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಅನುಚಿತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದರು.
ಸರಕಾರ ಬಾನು ಮುಷ್ಕಾಕರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳುವAತೆ ಹಾಗೂ ಈ ಪವಿತ್ರ ಹಬ್ಬದ ಉದ್ಘಾಟನೆಗೆ ಡಾ. ಎಸ್.ಎಲ್. ಭೈರಪ್ಪ ಅವರಂತಹ ಗಣ್ಯರನ್ನು ಆಹ್ವಾನಿಸಿ ಗೌರವಿಸುವಂತೆ ಆಗ್ರಹಿಸಲಾಗಿದೆ. ಹಿಂದೂ ಸಮುದಾಯದ ಭಾವನೆಗಳಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಸರಕಾರ ನಿರ್ಧಾರವನ್ನು ಮರುಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ವಿನಂತಿಸಿದರು.
ಉಪತಹಸೀಲ್ದಾರ ಪ್ರಶಾಂತ ಕಿಮಾಯಿ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಕೀಲ ಎಂ.ಎನ್. ಬಾಡಗಿ, ಅಮರೇಶ ಗಾಂಜಿ, ಈರಣ್ಣ ಪೂಜಾರ, ದುಂಡಪ್ಪ ಸವಣೂರು, ಯಲ್ಲಪ್ಪಗೌಡ ಪಾಟೀಲ, ಶಂಕರ ಬ್ಯಾಡಗಿ, ಸುಮಾ ಕುಂಬಾರ, ಶೋಭಾ ಇಟಗಿ ಮತ್ತಿತರರು ಹಾಜರಿದ್ದರು.


