ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ಒದಗಿಸುವ ಉದ್ದೇಶದಿಂದ `ದುಡಿಯೋಣ ಬಾ’ ಅಭಿಯಾನವನ್ನು ಆದ್ಯತೆ ಮೇರೆಗೆ ಹಮ್ಮಿಕೊಂಡಿದೆ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಹೇಳಿದರು.
ಅವರು ಶನಿವಾರ ಶಿರಹಟ್ಟಿಯ ತಾ.ಪಂ ಕಚೇರಿಯಲ್ಲಿ ದುಡಿಯೋಣ ಬಾ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಇದುವರೆಗೆ ನರೇಗಾ ಯೋಜನೆಯಲ್ಲಿ ಒಳಗೊಳ್ಳದೆ ಇರುವ ಕುಟುಂಬಗಳನ್ನು ಸಮೀಕ್ಷೆ ಮಾಡಿ ಅರ್ಹರಿಗೆ ಉದ್ಯೋಗ ಚೀಟಿ ವಿತರಿಸಲು ಆದ್ಯತೆ ನೀಡಲಾಗುವುದು. ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಯೋಜನೆಯ ಕುರಿತು ಅರಿವು ಮೂಡಿಸಿ, ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು, ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಗುರುತಿಸಿ, ಯೋಜನೆಯ ಸೌಲಭ್ಯಗಳನ್ನು ದೊರಕಿಸಿ ಕೊಡಲು ಒತ್ತು ನೀಡಲಾಗಿದೆ.
ಯೋಜನೆಯಡಿ ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು ಮತ್ತು ಸ್ವಾವಲಂಬಿಗಳಾಗಿ ಬದುಕುವಂತೆ ಮಾಡುವುದು ಅಭಿಯಾನದ ಉದ್ದೇಶವಾಗಿದೆ. ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಆಸ್ತಿಗಳನ್ನು ಸೃಜನೆ ಮಾಡುವ ಮೂಲಕ ಪರ್ಯಾಯ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು, ಅಂಗವಿಕಲರು, ಮಹಿಳೆಯರು, ಹಿರಿಯ ನಾಗರಿಕರು, ಮಂಗಳ ಮುಖಿಯರು ಸೇರಿದಂತೆ ದುರ್ಬಲ ವರ್ಗಗಳಿಗೆ ಆದ್ಯತೆಯ ಮೇರೆಗೆ ಜಾಬ್ ಕಾರ್ಡ್ ಮತ್ತು ಕೆಲಸ ಒದಗಿಸುವುದು ಸಹ ಅಭಿಯಾನದ ಭಾಗವಾಗಿದೆ.
ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರನ್ನು ಒಳಗೊಂಡು ಕಾಯಕ ಸಂಘಗಳನ್ನು ರಚನೆ ಮಾಡುವುದು ಮತ್ತು ಮಹಿಳಾ ಕಾಯಕ ಬಂಧುಗಳನ್ನು ನೇಮಿಸಿಕೊಂಡು 2025-26ನೇ ಸಾಲಿನಲ್ಲಿ ತಾಲೂಕಿನಲ್ಲಿ ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಶೇ. 60ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.