HomeGadag Newsಸಂತರ ದಾರಿಯಲ್ಲಿ ನಡೆದರೆ ಬದುಕು ಸಾರ್ಥಕ: ರಂಭಾಪುರಿ ಶ್ರೀ

ಸಂತರ ದಾರಿಯಲ್ಲಿ ನಡೆದರೆ ಬದುಕು ಸಾರ್ಥಕ: ರಂಭಾಪುರಿ ಶ್ರೀ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ತುಮಕೂರು: ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಶಿವಜ್ಞಾನದ ಅರಿವು ಮತ್ತು ಆಚರಣೆ ಮುಖ್ಯ. ಚಿಂತೆ ಚಿಂತನಗೊಂಡಾಗ ಬಾಳು ವಿಕಾಸಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಸೋಮವಾರ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ-ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಈಶ ನಿರ್ಮಿತವಾದ ಈ ಪ್ರಪಂಚದಲ್ಲಿ ಇರುವುದೆಲ್ಲವೂ ಅಮೂಲ್ಯ ಸಂಪತ್ತು. ಚಿನ್ನವಿಲ್ಲದೇ ಬದುಕಬಹುದು. ಆದರೆ ಅನ್ನವಿಲ್ಲದೇ ಬದುಕಲಾಗದು. ಶ್ರದ್ಧಾವಂತರಾದ ಭಾರತೀಯರು ಮಣ್ಣು, ನೀರು, ಗಾಳಿ, ಬೆಂಕಿ, ಕಲ್ಲುಗಳಲ್ಲಿ ದೇವರನ್ನು ಕಂಡು ಪೂಜಿಸಿದವರು. ದೇವರ ಮೇಲಿನ ನಂಬಿಕೆ ಶಾಶ್ವತ ನಂದಾದೀಪ. ನಂಬಿಕೆ ವಿಶ್ವಾಸಗಳನ್ನು ಎಂದಿಗೂ ಕಳೆದುಕೊಳ್ಳಬಾರದು. ಮನಸ್ಸೆಂಬ ಚಂಚಲ ಅಲೆಗಳ ಹೊಯ್ದಾಟವನ್ನು ಶಾಂತ ಪ್ರಶಾಂತಗೊಳಿಸುವ ಮಾರ್ಗವೇ ಆಧ್ಯಾತ್ಮವಾಗಿದೆ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂಪಿಸಿದ್ದಾರೆ. ಮನುಷ್ಯನಿಗೆ ಏನೆಲ್ಲ ಸೌಲಭ್ಯಗಳಿದ್ದರೂ ಬದುಕು ಹರ್ಷದಾಯಕವಾಗಿಲ್ಲ. ಜ್ಯೋತಿ ಉರಿದು ಬೆಳಕು ಕೊಡುವಂತೆ ಸಂತ ಮಹಾಂತರು ಬದುಕಿ ಬಾಳುವ ಜನ ಸಮುದಾಯಕ್ಕೆ ಆದರ್ಶ ವಿಚಾರ ಧಾರೆಗಳನ್ನು ಕೊಟ್ಟಿದ್ದಾರೆ. ಅವರು ತೋರಿದ ದಾರಿಯಲ್ಲಿ ನಡೆದರೆ ಸಾಕು, ಜೀವನ ಸಾರ್ಥಕಗೊಳ್ಳುತ್ತದೆ ಎಂದರು.

ದಿನದರ್ಶಿಕೆ ಬಿಡುಗಡೆಗೊಳಿಸಿದ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ ಮಾತನಾಡಿ, ಸತ್ಕಾರ್ಯಗಳ ಮೂಲಕ ಮನುಷ್ಯ ಮುನ್ನಡೆದಾಗ ಎಲ್ಲೆಡೆ ಶಾಂತಿ-ಸಮಾಧಾನ ನೆಲೆಗೊಳ್ಳಲು ಸಾಧ್ಯ. ಸತ್ಯ ಶುದ್ಧ ಕಾಯಕದಿಂದ ಬದುಕಿಗೆ ನಿಜವಾದ ಬೆಲೆ ಬರುತ್ತದೆ. ಶ್ರೀ ರಂಭಾಪುರಿ ಜಗದ್ಗುರುಗಳ ಶ್ರಮ ಸಂಚಾರ ಮತ್ತು ಬೋಧಾಮೃತ ನಮ್ಮೆಲ್ಲರ ಉನ್ನತಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಹರುಷ ವ್ಯಕ್ತಪಡಿಸಿದರು.

ಡಾ. ಎಸ್.ಪರಮೇಶ, ಟಿ.ಬಿ. ಹರೀಶ, ಎನ್.ಬಿ. ಪ್ರದೀಪಕುಮಾರ, ನಿಖಿಲ ರಾಜಣ್ಣ, ಸಿ.ಪಿ. ವಿಜಯ, ಎನ್.ಸಿ. ಸಚಿನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕೆ.ಬಿ. ಜಯಣ್ಣ, ಕೆ.ಜಿ. ಜಗದೀಶ ಮತ್ತು ಶಂಕರ್ ಮೋಹನ್ ಜಗದ್ಗುರುಗಳಿಂದ ಗುರುರಕ್ಷೆ ಸ್ವೀಕರಿಸಿದರು.

ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು. ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯರು, ಅಂಬಲದೇವರಹಳ್ಳಿ ಮಠದ ಉಜ್ಜನೀಶ್ವರ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು.

ಬಾಳೆಹೊನ್ನೂರು ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ ಜರುಗಿತು. ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟಿನ ಅಧ್ಯಕ್ಷ ಟಿ.ಆರ್. ಸದಾಶಿವಯ್ಯ ಸ್ವಾಗತಿಸಿದರು. ಸಹಕಾರ್ಯದರ್ಶಿ ಜಿ.ಎಸ್. ಸಿದ್ಧರಾಜು ನಿರೂಪಣೆ ಮಾಡಿದರು.

ಸಮಾರಂಭ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಮಾತನಾಡಿ, ಸಂಘರ್ಷದಿಂದ ಕೂಡಿದ ಮನುಷ್ಯನ ಬಾಳಿಗೆ ನೆಮ್ಮದಿ, ಶಾಂತಿ ದೊರಕಲು ಆಧ್ಯಾತ್ಮ ಚಿಂತನಗಳು ಅವಶ್ಯಕ. ಭಾರತೀಯ ಉತ್ಕೃಷ್ಟ ಸಂಸ್ಕೃತಿಯನ್ನು ನಾಡಿನ ಮಠಗಳು ಬೆಳೆಸುತ್ತಾ ಬಂದಿವೆ. ಶ್ರೀ ರಂಭಾಪುರಿ ಪೀಠದ ಲಿಂ.ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ದೂರದೃಷ್ಟಿ ಮತ್ತು ವಿಶಾಲ ಚಿಂತನಗಳು ನಮ್ಮೆಲ್ಲರ ಬಾಳಿಗೆ ಬೆಳಕು ತೋರುತ್ತಿವೆ. ಇಂದಿನ ಜಗದ್ಗುರುಗಳು ನಿರಂತರ ಶ್ರಮಿಸಿ ನಾಡು-ನುಡಿ-ಧರ್ಮ ಕಟ್ಟಿ ಬೆಳೆಸುವ ಕಾರ್ಯ ಮಾಡುತ್ತಿರುವುದು ಸಂತೋಷ ಉಂಟುಮಾಡುತ್ತದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!