ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರವಿ, “ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವಂತೆ ಕೆಲಸ ಮಾಡಬಾರದು. ಕೇವಲ ಒಂದು ಸಮುದಾಯವನ್ನು ಓಲೈಸುವ ರಾಜಕಾರಣ ಇತರ ಸಮುದಾಯಗಳಿಗೆ ದೊಡ್ಡ ಅನ್ಯಾಯ” ಎಂದು ಹೇಳಿದರು.
ಸಾಲದ ಬಡ್ಡಿ ಮನ್ನಾ ನೀತಿಯನ್ನು ವಿಶೇಷ ವರ್ಗದ ಮತಗಳನ್ನು ನೆಚ್ಚಿಕೊಂಡು ಕೈಗೊಳ್ಳುವುದು ಸಂವಿಧಾನ ವಿರೋಧಿ ಕ್ರಮ. ಸರ್ವ ಸಮುದಾಯಗಳ ಬಡವರ ಬಡ್ಡಿಯನ್ನೂ ತಕ್ಷಣ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ಇದೇ ವೇಳೆ, ಸಂಸದ ತೇಜಸ್ವಿ ಸೂರ್ಯರನ್ನು ಬಂಧಿಸಿರುವ ಬಗ್ಗೆ ತಮ್ಮ ಆಕ್ರೋಶವನ್ನೂ ವ್ಯಕ್ತಪಡಿಸಿದರು. ಜನರ ಪರ ಧ್ವನಿ ಎತ್ತಿರುವವರಿಗೆ ಸರ್ಕಾರದ ಈ ಕಠಿಣ ಕ್ರಮವು ಸರ್ವಾಧಿಕಾರಿ ಧೋರಣೆ ಮತ್ತು ಜನವಿರೋಧಿ ನೀತಿಯನ್ನು ತೋರಿಸುತ್ತದೆ. ಇಂತಹ ಕ್ರಮಗಳು ಪ್ರಜಾಪ್ರಭುತ್ವದಲ್ಲಿ ದೀರ್ಘಕಾಲ ಉಳಿಯುವುದಿಲ್ಲ” ಎಂದು ಎಚ್ಚರಿಸಿದರು.



