ಹಗರಿಬೊಮ್ಮನಹಳ್ಳಿ: ಪಟ್ಟಣ ಪೊಲೀಸ್ ಠಾಣೆಯಲ್ಲಿ ಕಟ್ಟಡ ಕಾರ್ಮಿಕ ಖಲೀಲುಲ್ಲಾ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಇಬ್ಬರು ಪೊಲೀಸರನ್ನು ಸಿಐಡಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಹೆಡ್ ಕಾನ್ ಸ್ಟೇಬಲ್ ರಾಘವೇಂದ್ರ ಹಾಗೂ ಕಾನ್ ಸ್ಟೇಬಲ್ ವೆಂಕಟೇಶ್ ಅವರನ್ನು ವಿಚಾರಣೆಗಾಗಿ ಬೆಂಗಳೂರಿನ ಸಿಐಡಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಗಿದೆ.
ಠಾಣೆಯಲ್ಲಿ ಪೊಲೀಸರೇ ಹೊಡೆದು ಖಲೀಲುಲ್ಲಾ ಅವರನ್ನು ಸಾಯಿಸಿದ್ದಾರೆ ಎಂದು ಮೃತರ ಪತ್ನಿ ಶೈನಾಜ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಬಂಧಿಸಿ ಹೂವಿನಹಡಗಲಿ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಬಳಿಕ, ಸಿಐಡಿ ತಂಡ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಇಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದೆ. ಬಳಿಕ ಅವರನ್ನು ವಿಚಾರಣೆಗೊಳಪಡಿಸಿ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.



