ಗದಗ: ಲೋಕಾಯುಕ್ತ ಅಧಿಕಾರಿಗಳು 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಸೇರಿದ ಎಂದು ಹೇಳಲಾಗಿರುವ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ.
ಗುತ್ತಿಗೆದಾರ ಗದಗ ತಾಲೂಕಿನ ಚಿಂಚಲಿ ಗ್ರಾಮದ ವಿಜಯ ತಂದೆ ಸಣ್ಣಹನಮಪ್ಪ ಪೂಜಾರ ಅವರಿಂದ 5 ಲಕ್ಷ ರೂಪಾಯಿ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲಂಚ ಬೇಡಿಕೆ ಆರೋಪ
ಗುತ್ತಿಗೆದಾರ ವಿಜಯ್ ತಂದೆ ಸಣ್ಣಹನಮಂತಪ್ಪ ಪೂಜಾರ (ವಯಸ್ಸು 35, ಚಿಂಚಲಿ, ತಾ. ಗದಗ) ಅವರಿಗೆ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಹಳ್ಳದ 2-ಚೆಕ್ ಡ್ಯಾಂ ಹಾಗೂ ತಡೆಗೋಡೆ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರತಿ ಕಾಮಗಾರಿಗೆ ₹48 ಲಕ್ಷ ಮೌಲ್ಯದಂತೆ 12% ಹಣ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಒಟ್ಟು ₹1 ಕೋಟಿ ಅನುದಾನದಲ್ಲಿ ನಡೆಯುವ ಈ ಕಾಮಗಾರಿಗೆ ಮುಂಗಡವಾಗಿ ₹5 ಲಕ್ಷ ನೀಡಲು ಹೋದಾಗ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದರೆಂದು ತಿಳಿದು ಬಂದಿದೆ. ದಾಳಿಯ ಸಂದರ್ಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಶಾಸಕರ ಖಾಸಗಿ ಆಪ್ತ ಕಾರ್ಯದರ್ಶಿ ಗುರು ಲಮಾಣಿ ಹಾಗೂ ಸರಕಾರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ವಾಲ್ಮೀಕಿ ಇವರು ಸ್ಥಳದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಮಂಜೂರಾದ ಕಾಮಗಾರಿ ವಿವರ
ಈ ಕಾಮಗಾರಿ ಧಾರವಾಡದ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾಗಿದ್ದು, ₹1 ಕೋಟಿ ರೂ. ಅನುದಾನದಲ್ಲಿ ಕಾರ್ಯನಿರ್ವಹಣೆಯಾಗುತ್ತಿದೆ.
ದಾಳಿಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ , ಗದಗ ಲೋಕಾಯುಕ್ತ ಡಿವೈಎಸ್ಪಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.ಈ ಘಟನೆ ಶಿರಹಟ್ಟಿ ಕ್ಷೇತ್ರದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ತನಿಖೆಯ ಬಳಿಕ ಹೆಚ್ಚಿನ ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ.

ಶಾಸಕ ಡಾ. ಚಂದ್ರು ಲಮಾಣಿ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
4.5 ಲಕ್ಷ ರೂ. ಪತ್ತೆ
ಶಾಸಕರಿಗೆ ಸೇರಿದ್ದೆಂದು ತಿಳಿದುಬಂದ ಬಾಲಾಜಿ ಆಸ್ಪತ್ರೆಯ ಕೆಳಮಹಡಿಯಲ್ಲಿ 4.5 ಲಕ್ಷ ರೂ. ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
50 ಸಾವಿರ ರೂ. ಕಾಗದ ಬಂಡಲ್ನಲ್ಲಿ ಎಸೆದ ಪಿಎ
ದಾಳಿಯ ಸಂದರ್ಭದಲ್ಲಿ ಶಾಸಕರ ಪಿಎ 50 ಸಾವಿರ ರೂ. ಹಣವನ್ನು ಕಾಗದದ ಬಂಡಲ್ನಲ್ಲಿ ಹಾಕಿ ಸಮೀಪದ ಖಾಸಗಿ ಶಾಲೆ ಬಳಿ ಎಸೆದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಲೋಕಾಯುಕ್ತ ಅಧಿಕಾರಿಗಳು ಪಿಎ ಎಸೆದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಬಾಲಾಜಿ ಆಸ್ಪತ್ರೆ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು,
- 3 ಸಿಪಿಐ
- 3 ಪಿಎಸ್ಐ
- 1 ಡಿಆರ್ ತುಕಡಿ
- ಸೇರಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆಸಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.



