ವಿಜಯಸಾಕ್ಷಿ ಸುದ್ದಿ, ಗದಗ: ಲಂಚದ ಬೇಡಿಕೆ, ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಹಾಗೂ ಆಡಳಿತಾತ್ಮಕ ನಿರ್ಲಕ್ಷ್ಯದ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ವಿವಿಧ ವಿಭಾಗಗಳ ದಾಖಲೆಗಳನ್ನು ಸುದೀರ್ಘವಾಗಿ ಪರಿಶೀಲಿಸಿದರು.
ಗದಗ ಲೋಕಾಯುಕ್ತ ಡಿಎಸ್ಪಿ ವಿಜಯ ಬಿರಾದಾರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಸಿಪಿಐಗಳು ಸೇರಿದಂತೆ ಗದಗ ಮತ್ತು ಧಾರವಾಡ ಜಿಲ್ಲೆಗಳ 15ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಬೆಳಗ್ಗೆಯೇ ಏಳಕ್ಕೂ ಹೆಚ್ಚು ವಾಹನಗಳಲ್ಲಿ ನಗರಸಭೆ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ವಿಭಾಗಗಳಿಗೆ ತೆರಳಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದರು.
ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಲೇವಾರಿ, ಪ್ರಗತಿ ಹಾಗೂ ಅನುಮೋದನೆಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿದರು. ಸಂಜೆಯವರೆಗೂ ಮುಂದುವರಿದ ಕಾರ್ಯಾಚರಣೆಯಲ್ಲಿ ಹಲವು ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ವಿವಿಧ ವಿಭಾಗಗಳಲ್ಲಿ ಕಂಡುಬಂದಿರುವ ಲೋಪದೋಷಗಳ ಕುರಿತು ಮಾಹಿತಿ ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳಿಂದ ದಾಖಲೆ ಹಾಗೂ ವಿವರಣೆ ಪಡೆದುಕೊಂಡರು.
ದಾಳಿಯ ಆರಂಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ಆಗಮಿಸಿದ್ದರಿಂದ ನಗರಸಭೆ ಕಚೇರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಗೊಂದಲ ಉಂಟಾದರೂ, ಯಾವುದೇ ಆತಂಕ ಬೇಡ, ಅಗತ್ಯ ದಾಖಲೆಗಳನ್ನು ಮಾತ್ರ ಒದಗಿಸುವಂತೆ ಅಧಿಕಾರಿಗಳು ಸೂಚಿಸಿ ಪರಿಶೀಲನೆ ಮುಂದುವರಿಸಿದರು.
ಗದಗ-ಬೆಟಗೇರಿ ನಗರಸಭೆಯಲ್ಲಿ ಹಲವು ವರ್ಷಗಳಿಂದ ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳ ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿರುವುದು ಮಹತ್ವ ಪಡೆದಿದೆ.
ದಿನವಿಡೀ ನಡೆದ ಲೋಕಾಯುಕ್ತ ಕಾರ್ಯಾಚರಣೆ ಅವಳಿ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ಪರಿಶೀಲನೆಯಲ್ಲಿ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರತ್ತ ಸಾರ್ವಜನಿಕರ ಚಿತ್ತ ನೆಟ್ಟಿದೆ.
ಲೋಕಾಯುಕ್ತ ಪರಿಶೀಲನೆ ನಡೆದ ವಿಭಾಗಗಳು
- ಬೀದಿದೀಪ ನಿರ್ವಹಣೆ
- ಕುಡಿಯುವ ನೀರು ಪೂರೈಕೆ
- ಟ್ಯಾಂಕರ್ ಮೂಲಕ ನೀರು ವಿತರಣೆ
- ಲೋಕೋಪಯೋಗಿ ವಿಭಾಗ
- ತೆರಿಗೆ ವಿಭಾಗ
- ಸಾರ್ವಜನಿಕ ಅರ್ಜಿಗಳ ವಿಲೇವಾರಿ
- ಇತರೆ ಆಡಳಿತ ವಿಭಾಗಗಳ ದಾಖಲೆಗಳು



