ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ಮಧ್ಯೆ ಇರುವ ಕಣಿವೆ ಪ್ರದೇಶದಲ್ಲಿ ಬೃಹತ್ ಗಾತ್ರದ ಗ್ರಾನೈಟ್ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿಯಾದ ಪರಿಣಾಮ ಲಾರಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ದೊಡ್ಡಪ್ಪಯ್ಯ ಮೃತ ಲಾರಿ ಮಾಲೀಕ. ವೆಂಕಟೇಶ್ ಗಾಯಗೊಂಡ ಚಾಲಕ. ರಾಷ್ಟ್ರೀಯ ಹೆದ್ದಾರಿ 69ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ಮಧ್ಯೆ ಕಣಿವೆ ಪ್ರದೇಶದಲ್ಲಿ ಇಳಿಜಾರು ಇದ್ದು, ಒಂದೆಡೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದೇ ರಸ್ತೆಯಲ್ಲಿ ಚಿಕ್ಕಬಳ್ಳಾಪುರದ ಕಡೆಯಿಂದ ಗೌರಿಬಿದನೂರಿಗೆ ಗ್ರಾನೈಟ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಗ್ರಾನೈಟ್ಗಳು ಕ್ಯಾಬಿನ್ಗೆ ಬಡಿದ ಪರಿಣಾಮ ಕ್ಯಾಬಿನ್ನಲ್ಲಿದ್ದ ಲಾರಿ ಮಾಲೀಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಲಾರಿ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.