ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಹೋಟೆಲ್ಗಳಿಗೆ ಸ್ವಲ್ಪ ಮಟ್ಟಿಗೆ ಎಲ್ಪಿಜಿ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ನಗರದಲ್ಲಿ ಕೆಲವು ಹೋಟೆಲ್ಗಳು ಬಂದ್ ಆಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್ ಕಂಪನಿಗಳೊಂದಿಗೆ ಮಹತ್ವದ ಸಭೆ ನಡೆಯಲಿದೆ ಎಂದರು. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಪರಿಸ್ಥಿತಿ ಕುರಿತು ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಎಲ್ಪಿಜಿ ಕೊರತೆ ಕ್ರಮೇಣ ನಿವಾರಣೆಯಾಗುವ ನಿರೀಕ್ಷೆಯಿದ್ದು, ಎರಡು ಕಾರ್ಗೋ ಹಡಗುಗಳು ಬಂದಿರುವುದರಿಂದ ಪೂರೈಕೆ ಸುಧಾರಿಸುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು.
ಇನ್ನೂ ಯುದ್ಧ ಪರಿಸ್ಥಿತಿ ಸಂಪೂರ್ಣವಾಗಿ ನಿಂತಿಲ್ಲದ ಹಿನ್ನೆಲೆಯಲ್ಲಿ ಎಲ್ಪಿಜಿಯನ್ನು ಮಿತವಾಗಿ ಹಾಗೂ ಸೂಕ್ಷ್ಮವಾಗಿ ಬಳಸುವ ಅಗತ್ಯವಿದೆ. ಸಂಪೂರ್ಣವಾಗಿ ಪೂರೈಕೆ ಸಾಮಾನ್ಯ ಸ್ಥಿತಿಗೆ ಬರುವವರೆಗೆ ಎಚ್ಚರಿಕೆಯಿಂದ ಬಳಕೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಇದರ ಜೊತೆಗೆ ಹೋಟೆಲ್ಗಳಿಗೆ ಕೂಡ ಸ್ವಲ್ಪ ಪ್ರಮಾಣದಲ್ಲಿ ಎಲ್ಪಿಜಿ ನೀಡುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದ್ದು, ಸೋಮವಾರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪ್ರಸ್ತುತ ವಾಣಿಜ್ಯ ಎಲ್ಪಿಜಿ ಸರಬರಾಜಿನಲ್ಲಿ ಉಂಟಾದ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಅನೇಕ ಹೋಟೆಲ್ಗಳು ಬಂದ್ ಆಗಿದ್ದು, ಇನ್ನೂ ಹಲವು ಹೋಟೆಲ್ಗಳು ತಮ್ಮ ಮೆನುವಿನಲ್ಲಿ ಬದಲಾವಣೆ ಮಾಡಿ ಇಂಡಕ್ಷನ್ ಸ್ಟವ್ ಹಾಗೂ ಕಟ್ಟಿಗೆಯ ಮೂಲಕ ಅಡುಗೆ ಮಾಡುತ್ತಿರುವುದಾಗಿ ಸಚಿವರು ಮಾಹಿತಿ ನೀಡಿದರು.



