HomeArt and Literatureಮಕ್ಕಳ ಬಾಳಿಗೆ ಬೆಳಕಾಗಿರುವ ಅಪರೂಪದ ಸಂಪನ್ಮೂಲ ವ್ಯಕ್ತಿ: ಎಂ.ಎಚ್. ಸವದತ್ತಿ

ಮಕ್ಕಳ ಬಾಳಿಗೆ ಬೆಳಕಾಗಿರುವ ಅಪರೂಪದ ಸಂಪನ್ಮೂಲ ವ್ಯಕ್ತಿ: ಎಂ.ಎಚ್. ಸವದತ್ತಿ

For Dai;y Updates Join Our whatsapp Group

ಸರ್ಕಾರಿ ಸೇವೆ ಎಂದರೆ ಕೇವಲ ಕರ್ತವ್ಯ ನಿರ್ವಹಣೆಗೆ ಸೀಮಿತವಾಗದೆ, ಮಕ್ಕಳ ಭವಿಷ್ಯ ರೂಪಿಸುವ ಸಾಮಾಜಿಕ ಜವಾಬ್ದಾರಿಯೂ ಆಗಿದೆ ಎಂಬುದನ್ನು ತಮ್ಮ ಕಾರ್ಯದ ಮೂಲಕ ಸಾಬೀತುಪಡಿಸಿರುವ ಅಪರೂಪದ ಸಂಪನ್ಮೂಲ ವ್ಯಕ್ತಿ ಎಂ.ಎಚ್. ಸವದತ್ತಿ ಅವರು ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ.

ಮೂಲತಃ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಆರಂಭಿಸಿದ ಸವದತ್ತಿ ಅವರು ಮಕ್ಕಳಿಗೆ ಕೇವಲ ಪಠ್ಯ ಶಿಕ್ಷಣ ನೀಡದೆ, ಅವರಲ್ಲಿರುವ ಆಸಕ್ತಿ ಮತ್ತು ಪ್ರತಿಭೆಯನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ವಿಜ್ಞಾನ ಪ್ರದರ್ಶನಗಳಲ್ಲಿ ಪಾಲ್ಗೊಳ್ಳಲು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಪ್ರೋತ್ಸಾಹ ನೀಡಿದ್ದು ಅವರ ಶಿಕ್ಷಣ ಪ್ರೀತಿಗೆ ಸಾಕ್ಷಿಯಾಗಿದೆ.

ಶಾಲೆಯಲ್ಲಿ ಮಾದರಿ ವಿಜ್ಞಾನ ಪ್ರಯೋಗಾಲಯ ನಿರ್ಮಿಸಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಮೂಡಿಸಿದರು. ಇದರ ಫಲವಾಗಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದು ಗದಗ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ನಂತರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ತಾಂತ್ರಿಕ ಸಹಾಯಕರಾಗಿ ಪದೋನ್ನತಿ ಪಡೆದರೂ ತಮ್ಮ ಜ್ಞಾನವನ್ನು ಕಚೇರಿ ಕೆಲಸಕ್ಕೆ ಮಾತ್ರ ಸೀಮಿತಗೊಳಿಸಲಿಲ್ಲ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜೆ ದಿನಗಳಲ್ಲಿಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಕಾರ್ಯಾಗಾರಗಳನ್ನು ನಡೆಸುತ್ತಾ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಜ್ಞಾನ ವಿಷಯದ ಪ್ರಯೋಗಗಳು, ಚಿತ್ರಗಳು ಹಾಗೂ ಅವುಗಳ ಭಾಗಗಳನ್ನು ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಬೋಧಿಸುವುದು ಅವರ ವಿಶೇಷತೆ. ವಿದ್ಯಾರ್ಥಿಗಳಲ್ಲಿರುವ ವಿಜ್ಞಾನ ವಿಷಯದ ಭಯ ನಿವಾರಿಸಿ, ಪರೀಕ್ಷಾ ತಂತ್ರಗಳು, ಉತ್ತರ ಬರವಣಿಗೆ ಕೌಶಲ್ಯ ಹಾಗೂ ಆತ್ಮವಿಶ್ವಾಸ ಬೆಳೆಸುವ ಮೂಲಕ ಉತ್ತಮ ಫಲಿತಾಂಶಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಆನ್‌ಲೈನ್‌ನಲ್ಲಿ ನಡೆದ ‘ಪರೀಕ್ಷಾ ಪೇ ಚರ್ಚಾ’ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಎಂಬ ವಿಷಯದ ಕುರಿತು ಮಂಡಿಸಿದ ಪ್ರಬಂಧವನ್ನು ಮೆಚ್ಚಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನಾ ಪತ್ರ ರವಾನಿಸಿರುವುದು ವಿಶೇಷ ಸಾಧನೆಯಾಗಿದೆ.

೨೦೨೫-೨೬ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಗುಣಾತ್ಮಕ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಸವದತ್ತಿ ಅವರು 37 ಕಾರ್ಯಾಗಾರಗಳನ್ನು ನಡೆಸಿದ್ದಾರೆ. ಈ ಕಾರ್ಯಾಗಾರಗಳಲ್ಲಿ 85 ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, 4,049 ವಿದ್ಯಾರ್ಥಿಗಳು ನೇರ ಪ್ರಯೋಜನ ಪಡೆದಿದ್ದಾರೆ.

ವಿಜಯನಗರ, ಉತ್ತರ ಕನ್ನಡ, ಹುಬ್ಬಳ್ಳಿ ಸೇರಿದಂತೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಶಾಲೆ-ಕಾಲೇಜುಗಳಲ್ಲಿ ವಿಜ್ಞಾನ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿದ್ದಾರೆ.

ಕಾರ್ಯಾಗಾರಗಳಲ್ಲಿ ವಿಜ್ಞಾನ ಪಠ್ಯಕ್ರಮದ ರೂಪರೇಖೆ, ಅಂಕ ಹಂಚಿಕೆ, ಚಟುವಟಿಕೆ ಆಧಾರಿತ ಕಲಿಕೆ, ಪ್ರಯೋಗಗಳು, ಮಾದರಿ ಪ್ರಶ್ನೆಪತ್ರಿಕೆಗಳ ವಿಶ್ಲೇಷಣೆ, ವೈಜ್ಞಾನಿಕ ಚಿತ್ರಗಳ ಅಭ್ಯಾಸ ಹಾಗೂ ಉತ್ತರ ಬರೆಯುವ ವಿಧಾನಗಳ ಕುರಿತು ತರಬೇತಿ ನೀಡಲಾಗುತ್ತದೆ. ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗೆ ಉತ್ತೀರ್ಣತೆ ಸಾಧಿಸಲು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ 40+ ಹಾಗೂ 50+ ಅಂಕ ಗಳಿಸಲು ವಿಶೇಷ ಮಾರ್ಗದರ್ಶನ ನೀಡಲಾಗುತ್ತಿದೆ.

ತಮ್ಮ ವಿಶ್ರಾಂತಿ ಮತ್ತು ರಜೆ ದಿನಗಳನ್ನೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಮೀಸಲಿಟ್ಟು ಜ್ಞಾನ ಹಂಚುತ್ತಿರುವ ಎಂ.ಎಚ್. ಸವದತ್ತಿ ಅವರ ಸೇವೆ ನಿಜಕ್ಕೂ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಿದೆ. ಕಚೇರಿಯ ಕರ್ತವ್ಯದೊಂದಿಗೆ ಸಾವಿರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಆತ್ಮವಿಶ್ವಾಸದ ಬೆಳಕು ಹಚ್ಚುತ್ತಿರುವ ಅವರು, ಶಿಕ್ಷಕ ವೃತ್ತಿಯ ನಿಜವಾದ ಅರ್ಥವನ್ನು ತಮ್ಮ ಕಾರ್ಯದ ಮೂಲಕ ಸಾರುತ್ತಿದ್ದಾರೆ.

ವೆಂಕಟೇಶ ಬಿ. ಇಮರಾಪೂರ, ಹಿರಿಯ ಪತ್ರಕರ್ತರು, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img