ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಸೋಮೇಶ್ವರ ತೇರಿನ ಆವರಣದಲ್ಲಿ ನವೆಂಬರ್ 3ರಂದು ಬೆಳಿಗ್ಗೆ 10ಕ್ಕೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕರ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ವಿವಿಧೋದ್ದೇಶಗಳ ಸಂಘದ ತಾಲೂಕು ಘಟಕದ ಅಧ್ಯಕ್ಷ ಭೀಮಣ್ಣ ಯಂಗಾಡಿ ಮಾಹಿತಿ ನೀಡಿದರು.
ಈ ಕುರಿತು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕರಡಿ ಮಾತನಾಡಿ, ಈ ಬಾರಿ ತಾಲೂಕಿನಲ್ಲಿ ವಾಲ್ಮೀಕಿ ಮತ್ತು ವೀರ ಮದಕರಿ ನಾಯಕ ಜಯಂತ್ಯುತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದೇವೆ. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಾಸಕ ಡಾ. ಚಂದ್ರು ಲಮಾಣಿ, ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಅಧ್ಯಕ್ಷತೆ ವಹಿಸಿಕೊಳ್ಳುವರು ಎಂದು ತಿಳಿಸಿದರು.
ಸಂಘದ ಯುವ ಮುಖಂಡ ಪ್ರಕಾಶ ಬೆಂತೂರ ಮಾತನಾಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಗಮಿಸುವ ಕಲಾವಿದರಿಂದ ಕಲಾ ಪ್ರದರ್ಶನ ನಡೆಯುವುದು. ನೂರಾರು ಮಹಿಳೆಯರ ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಯುವುದು. ತೇರಿನ ಮನೆಯಿಂದ ಆರಂಭವಾಗುವ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಂಘದ ಕಾರ್ಯದರ್ಶಿ ಹನಮಂತ ಜಾಲಿಮರದ, ಉಪಾಧ್ಯಕ್ಷ ರಾಜು ಓಲೆಕಾರ, ನಾಗರಾಜ ಹಾವಳಕೇರಿ, ಸುರೇಶ ಹಾವನೂರ, ಚಂದ್ರು ತಳವಾರ, ರಾಮಣ್ಣ ಕಲಕೋಟಿ, ಕೆ.ಒ. ಹೂಲಿಕಟ್ಟಿ, ಕಲ್ಲಪ್ಪ ಗಂಗಣ್ಣವರ, ಬಸವರಾಜ ದೊಡ್ಡಮನಿ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ಸಮಾರಂಭದ ಪ್ರಚಾರ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಯಿತು.
ಸಮಾಜದ ಮುಖಂಡ ಎನ್.ಎನ್. ನೆಗಳೂರ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಚಿತ್ರನಟ ಕಿಚ್ಚ ಸುದೀಪ್ ಸೇರಿದಂತೆ ಶಾಸಕರು, ಮಾಜಿ ಶಾಸಕರು, ರಾಜಕೀಯ ಮುಖಂಡರು ಸಮಾರಂಭಕ್ಕೆ ಆಗಮಿಸುವರು. ಡಾ. ಪ್ರಭುರಾಜ ಕೆ.ಎನ್. ಅವರು ಉಪನ್ಯಾಸ ನೀಡುವರು. ವಾಲ್ಮೀಕಿ ನಾಯಕ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.



