ಗದಗ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ರೈತ ಕುಟುಂಬದ ಬದುಕು ಬೆಂಕಿಗೆ ಆಹುತಿಯಾದ ಮನಕಲಕುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಡಿಸೇಲ್ ಮತ್ತು ಪೆಟ್ರೋಲ್ ಸುರಿದು ಮೆಕ್ಕೆಜೋಳಕ್ಕೆ ರಾಶಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಸುಮಾರು 60 ಲಕ್ಷ ರೂ. ಮೌಲ್ಯದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಅತ್ತಿಕಟ್ಟಿ ಗ್ರಾಮದ ಗಣೇಶ ಮತ್ತು ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಗ್ರಾಮ ಹೊರವಲಯದಲ್ಲಿ ರಾಶಿ ಮಾಡಿ ಇಟ್ಟಿದ್ದರು. ಆದರೆ ರಾತ್ರೋರಾತ್ರಿ ನಾಲ್ವರು ದುಷ್ಕರ್ಮಿಗಳು ಬಂದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರೂ, ಅಷ್ಟರಲ್ಲಿ ಲಕ್ಷಾಂತರ ಮೌಲ್ಯದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಕಿಗೆ ಆಹುತಿಯಾದ ಬೆಳೆ ನೋಡಿದ ರೈತ ಕುಟುಂಬ ತೀವ್ರ ಆಘಾತಕ್ಕೊಳಗಾಗಿದ್ದು, ಮಕ್ಕಳ ಸಮೇತ ಮೆಕ್ಕೆಜೋಳದ ರಾಶಿಯಲ್ಲಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ತಕ್ಷಣವೇ ರೈತ ಕುಟುಂಬವನ್ನು ರಕ್ಷಿಸಿದ್ದಾರೆ.
ಸುಮಾರು 25 ರಿಂದ 30 ಲಕ್ಷ ರೂ. ಸಾಲ ಮಾಡಿಕೊಂಡು, ಗೋವಾದಲ್ಲಿ ದುಡಿದು ಹಣ ಸಂಗ್ರಹಿಸಿ ಈ ಬೆಳೆ ಬೆಳೆದಿದ್ದ ಸಹೋದರರ ಕನಸುಗಳು ಕ್ಷಣಾರ್ಧದಲ್ಲಿ ಭಸ್ಮವಾಗಿವೆ. ಘಟನೆಗೆ ಗ್ರಾಮಸ್ಥರು ಕಣ್ಣೀರಿಟ್ಟಿದ್ದು, ದುಷ್ಕರ್ಮಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಮುಂಡರಗಿ ತಹಶೀಲ್ದಾರ ಎರ್ರೀಸ್ವಾಮಿ ಹಾಗೂ ಪೊಲೀಸರು ಹಾಗೂ SOCO ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.



