ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಗ್ರಂಥಾಲಯ ಉಪಕರ ವಸೂಲಾತಿ ಪ್ರಗತಿ ಕುಂಠಿತವಾಗಿದ್ದು, ಪ್ರತಿ ತಿಂಗಳು ಶೇ.10ರಷ್ಟು ಗುರಿ ನಿಗದಿಪಡಿಸಿಕೊಂಡು ಪ್ರಗತಿ ಸಾಧಿಸಬೇಕು. ಗ್ರಾಮಸ್ವರಾಜ್ ತಂತ್ರಾಂಶದಲ್ಲಿ ಅನುಮೋದಿತ ಕ್ರಿಯಾ ಯೋಜನೆಯನ್ನು ಅಳವಡಿಸುವುದು, ಇ-ಸ್ವತ್ತು ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿಸಿಕೊಂಡಿದ್ದು ಈ ಕುರಿತು ಕ್ರಮ ವಹಿಸಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಸೂಚಿಸಿದರು.
ಮಂಗಳವಾರ ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
15ನೇ ಹಣಕಾಸು ಯೋಜನೆಯಡಿ ಈಗಾಗಲೇ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾದ ಅನುದಾನವನ್ನು ನಿಗದಿತ ಮಟ್ಟದಲ್ಲಿ ವೆಚ್ಚ ಭರಿಸದೇ ಬಹಳಷ್ಟು ಅನುದಾನ ಬಾಕಿ ಉಳಿಸಿಕೊಂಡಿದ್ದು, ಅನುದಾನ ವೆಚ್ಚ ಭರಿಸಬೇಕು. ಜಿಲ್ಲೆಯ ಎಲ್ಲಾ ಗ್ರಾ.ಪಂಗಳಲ್ಲಿ ಕಡ್ಡಾಯವಾಗಿ ಮಹಿಳಾ ಗ್ರಾಮ ಸಭೆಗಳನ್ನು ಆಯೋಜಿಸಬೇಕು ಎಂದರು.
ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ ಈಗಾಗಲೇ ವಯಕ್ತಿಕ ಶೌಚಾಲಯ ನಿರ್ಮಾಣ ಮಾಡಲು ಕಾರ್ಯಾದೇಶ ನೀಡಿದ ಫಲಾನುಭವಿಗಳು ತುರ್ತಾಗಿ ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದಂತೆ 2025-26ನೇ ಸಾಲಿನ ಮೇ-2025ರ ಮಾಹೆ ಕಳೆದರೂ ವಾರ್ಷಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸದೇ ಕನಿಷ್ಠ ಪ್ರಗತಿ ಸಾಧಿಸಿರುವ ಗ್ರಾ.ಪಂಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಕೂಲಿಕಾರರಿಗೆ ಸ್ಥಳೀಯವಾಗಿ ಕೆಲಸ ಒದಗಿಸಿ ಪ್ರಗತಿ ಸಾಧಿಸಬೇಕು. ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಸರಕಾರದಿಂದ ನಿಗದಿಪಡಿಸಿದ ಶೇ.60ರಷ್ಟು ಗುರಿ ಸಾಧಿಸಲು ಹಾಗೂ ಬೂದು ನೀರು ನಿರ್ವಹಣೆ ಕಾಮಗಾರಿಗಳ ಡಿಪಿಆರ್ಗಳನ್ನು ತಯಾರಿಸಿ ಸಲ್ಲಿಸಲು ಮತ್ತು ಜಿಲ್ಲೆಯಲ್ಲಿ ದಾಖಲಾಗಿರುವ ಸಾಮಾಜಿಕ ಲೆಕ್ಕ ಪರಿಶೋಧನಾ ಆಕ್ಷಪಣೆ ಮತ್ತು ವಸೂಲಾತಿ ಮಾಡಿ ಇತ್ಯರ್ಥಪಡಿಸಲು ಜಿ.ಪಂ ಸಿ.ಇಓ ಭರತ್ ಎಸ್ ಸೂಚಿಸಿದರು.
ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮಂಜೂರಾದ ಮನೆಗಳಿಗೆ ತುರ್ತಾಗಿ ಮುಂದಿನ ಕ್ರಮ ವಹಿಸಲು ಸೂಚಿಸಲಾಯಿತು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿ.ಪಂ ಯೋಜನಾ ನಿರ್ದೇಶಕರು, ಮುಖ್ಯ ಯೋಜನಾಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಟ್ರೈನಿಂಗ್ ಮ್ಯಾನೇಜ್ಮೆಂಟ್ ಪೋರ್ಟಲ್ ತಂತ್ರಾಂಶದಲ್ಲಿ ಗ್ರಾ.ಪಂನ ಎಲ್ಲ ಚುನಾಯಿತ ಪ್ರತಿನಿಧಿಗಳ ಹಾಗೂ ಸಿಬ್ಬಂದಿಗಳ ಆಧಾರ್ ಕಾರ್ಡ್ ವಿವರಗಳನ್ನು ಅಳವಡಿಸಬೇಕು. ಈಗಾಗಲೇ ಕೆಲವು ಗ್ರಾ.ಪಂಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾರ್ಯನಿರ್ವಹಿಸಲು ಸ್ಥಳಾವಕಾಶವಿದ್ದು, ಇನ್ನುಳಿದ ಗ್ರಾ.ಪಂ ಕಟ್ಟಡದಲ್ಲಿ ಕಾರ್ಯನಿರ್ವಹಿಸಲು ಸ್ಥಳಾವಕಾಶ ಕಲ್ಪಿಸಬೇಕು ಎಂದು ಜಿ.ಪಂ ಸಿ.ಇಓ ಭರತ್ ಎಸ್ ಸೂಚಿಸಿದರು.