ವಿಜಯಸಾಕ್ಷಿ ಸುದ್ದಿ, ರೋಣ: ರೋಣ ತಾಲೂಕು ಸೇರಿದಂತೆ ಗಜೇಂದ್ರಗಡ ಹಾಗೂ ರೋಣ ಮತಕ್ಷೇತ್ರದ ಎಲ್ಲ ಕುಟುಂಬಗಳು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಿ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.
ಅವರು ಸೋಮವಾರ ಪಟ್ಟಣ ಗುರುಭವನದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರಿಗೆ ಕಿಟ್ ವಿತರಿಸಿ ಮಾತನಾಡಿದರು.
ಶಿಕ್ಷಕರು ಸೇರಿ ಸರಕಾರಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಸರಕಾರ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಸಿಬ್ಬಂದಿಗಳು ನೀವಾಗಿದ್ದೀರಿ. ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡದೆ ಸರಕಾರ ನೀಡಿದ ಅವಧಿಯಲ್ಲಿ ಗಣತಿ ಕಾರ್ಯವನ್ನು ಪೂರ್ಣಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ರೋಣ ತಾಲೂಕಿನಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ 21 ಮೇಲ್ವಿಚಾರಕರು ಹಾಗೂ 353 ಗಣತಿದಾರರನ್ನು ನಿಯೋಜನೆ ಮಾಡಲಾಗಿದೆ. ಗಣತಿ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲ ನೌಕರರು ಪ್ರತಿ ಕುಟುಂಬಗಳನ್ನು ಸಂಪರ್ಕಿಸಬೇಕು. ಅಂದಾಗ ಮಾತ್ರ ಸರಕಾರಕ್ಕೆ ನಿಜವಾದ ದತ್ತಾಂಶ ಲಭಿಸಲಿದೆ. ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಗಳಿಗೂ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದ್ದು, ಅಧಿಕಾರಿಗಳು ಮತ್ತು ಶಿಕ್ಷಕರು ಕಾರ್ಯಕ್ಷಮತೆಯಿಂದ ಗಣತಿ ಕಾರ್ಯದಲ್ಲಿ ತೊಡಗಬೇಕು ಎಂದರು.
ರಾಜ್ಯ ಸರಕಾರ ರಾಜ್ಯದಲ್ಲಿರುವ ಸರ್ವ ಜನಾಂಗದ ಶಿಕ್ಷಣ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುವ ಉದ್ದೇಶದಿಂದ ಗಣತಿ ಕಾರ್ಯಕ್ಕೆ ಮುಂದಾಗಿದೆ. ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಹಬ್ಬದಂತೆ ಆಚರಿಸಬೇಕು ಎಂದರು.
ಬಿಇಎಂ ವಿಸ್ತರಣಾಧಿಕಾರಿ ಮಲ್ಲಿಕಾರ್ಜುನ ಹನಸಿ, ಅಕ್ಷರ ದಾಸೋಹಾಧಿಕಾರಿ ಆರ್.ಎಲ್. ನಾಯ್ಕರ್, ಎಂ. ಫಣಿಬಂದ, ಶಿವಪುತ್ರಪ್ಪ ಕಮಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣತಿ ಕಾರ್ಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.