ಮಂಡ್ಯ: ನನ್ನ ರಾಜಕೀಯ ಪ್ರವೇಶ ಮಂಡ್ಯ ಜಿಲ್ಲೆಯಿಂದಲೇ ಆರಂಭವಾಗಿದೆ. ನಾವು ಮಂಡ್ಯದಲ್ಲಿ ಹುಟ್ಟದಿದ್ದರೂ ಈ ಜಿಲ್ಲೆಯ ಋಣ ನಮ್ಮ ಮೇಲಿದೆ. ಯಾವ ಊರಿಗೆ ಹೋದರೂ ಜನರು ತೋರಿಸುವ ಪ್ರೀತಿ ಮತ್ತು ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ಹಾಗೂ ಪಕ್ಷದ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯ ಸೋಲು ತಮ್ಮ ರಾಜಕೀಯ ಜೀವನಕ್ಕೆ ಮಹತ್ವದ ಪಾಠ ಕಲಿಸಿತು ಎಂದು ಹೇಳಿದರು.
ಅಂದಿನ ನಿಖಿಲ್ ಮತ್ತು ಇಂದಿನ ನಿಖಿಲ್ ನಡುವೆ ಸಾಕಷ್ಟು ಬದಲಾವಣೆಗಳಾಗಿವೆ. ಆ ಸೋಲು ರಾಜಕೀಯವಾಗಿ ಮತ್ತಷ್ಟು ಪಕ್ವತೆ ಮತ್ತು ಅನುಭವ ನೀಡಿದೆ. ಜನರ ಆಶಯಗಳನ್ನು ಅರ್ಥಮಾಡಿಕೊಳ್ಳಲು ಅದು ನನಗೆ ನೆರವಾಗಿದೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ ಕುರಿತು ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೋರಾಟದ ಫಲವೇ ಜನತಾದಳ ಪಕ್ಷ. 25 ವರ್ಷಗಳ ರಜತ ಮಹೋತ್ಸವ ಆಚರಿಸುತ್ತಿರುವ ಜೆಡಿಎಸ್ ಕನ್ನಡ ನಾಡು, ನುಡಿ, ನೆಲ, ಜಲ ಮತ್ತು ಭಾಷೆಯ ಪರ ಸದಾ ಹೋರಾಟ ನಡೆಸಿದ ಪಕ್ಷವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಹುಟ್ಟಿ ಅಸ್ತಂಗತವಾಗಿವೆ. ಆದರೆ ಜನರ ಆಶೀರ್ವಾದ ಮತ್ತು ಕಾರ್ಯಕರ್ತರ ಶ್ರಮದಿಂದ ಜೆಡಿಎಸ್ ಗಟ್ಟಿಯಾಗಿ ಉಳಿದು ರಾಜ್ಯ ರಾಜಕಾರಣದಲ್ಲಿ ಸುಭದ್ರ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರತಿಪಾದಿಸಿದರು.



