ಮಂಡ್ಯ:– ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆ ನಾಗಮಂಗಲದಲ್ಲಿ ಇಂದು, ನಾಳೆ ನಿಷೇಧಾಜ್ಞೆ ಜಾರಿ ಮಾಡಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕಳೆದ ವರ್ಷ ಇಲ್ಲಿ ಕೋಮು ಗಲಭೆ ಆದ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಇಂದು ಮತ್ತು ನಾಳೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಕಳೆದ ವರ್ಷ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ಹಾಗೂ ಪೆಟ್ರೋಲ್ ಬಾಂಬ್ಗಳನ್ನ ಎಸೆಯಲಾಗಿತ್ತು. ಬಳಿಕ ಕೋಮುಗಲಭೆ ಸೃಷ್ಟಿಯಾಗಿ ಅಪಾರ ಪ್ರಮಾಣ ಆಸ್ತಿಪಾಸ್ತಿ ನಷ್ಟವಾಗಿತ್ತು. ಈ ಬಾರಿ ಆ ರೀತಿಯ ಘಟನೆ ಮರುಕಳಿಸಬಾರದು ಎಂದು ಮಂಡ್ಯ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.
ಇಂದು ನಾಗಮಂಗಲ ಪಟ್ಟಣದ ಹಲವೆಡೆ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಗಳನ್ನು ಇಂದು ಸಾಮೂಹಿಕವಾಗಿ ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಇಂದು ಮತ್ತು ನಾಳೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ನಾಗಮಂಗಲ ಪಟ್ಟಣ ಸೇರಿದಂತೆ ಸುತ್ತಮುತ್ತ ಎರಡು ದಿನಗಳ ಕಾಲ ಮದ್ಯ ಮಾರಟ ನಿಷೇಧ ಮಾಡಲಾಗಿದೆ. ಇನ್ನೂ ಪೊಲೀಸ್ ಇಲಾಖೆಯಿಂದಲೂ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗಿದೆ.