ಧಾರವಾಡ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಶ್ರೀನಗರ ವೃತ್ತದಲ್ಲಿ ಯುವಕರು ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಘೋಷಣೆ ಕೂಗಿದರು.
ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ಸರ್ಕಾರದ ವಿರುದ್ಧ ಕಿಡಿಕಾರಿದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಶ್ರೀನಗರ ವೃತ್ತದ ಬಳಿ ಯುವಕರನ್ನು ತಡೆದು ನಿಲ್ಲಿಸಿದರು.
ಇಂದು ಪ್ರತಿಭಟನೆ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅನುಮತಿ ಕೇಳಿದ್ದರೂ, ಪೊಲೀಸರು ಅದನ್ನು ನಿರಾಕರಿಸಿದ್ದರು. ಬಳಿಕ ಸಂಘಟನೆ ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯವು ಪೊಲೀಸರೊಂದಿಗೆ ಚರ್ಚಿಸಿ ಎಂದು ಸೂಚಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತ್ತು.
ಇದರ ನಡುವೆಯೇ ಬಿಜೆಪಿ ಹೋರಾಟಕ್ಕೆ ಅನುಮತಿ ನೀಡಲಾಗಿದೆ ಎಂಬ ಸುದ್ದಿ ಹಿನ್ನೆಲೆ, ಅನುಮತಿ ಇಲ್ಲದಿದ್ದರೂ ಪ್ರತಿಭಟನಾಕಾರರು ಬೀದಿಗೆ ಇಳಿದಿದ್ದಾರೆ. ಧಾರವಾಡದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.



