ವಿಜಯಸಾಕ್ಷಿ ಸುದ್ದಿ, ಗದಗ: ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಗಳು ಸ್ಥಾಪಿಸಿದ ಅಖಿಲ ಭಾರತ ಲಿಂಗಾಯತ ಮಹಾಸಭಾದ ಉದ್ದೇಶಗಳು ಸಾಕಾರಗೊಳ್ಳಲು, ಸಮಾಜ ಸನ್ಮಾರ್ಗದಲ್ಲಿ ಮುನ್ನಡೆಯಲು ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸಿಕೊಂಡು ಮುನ್ನಡೆಯುವದು ಎಂದಿಗಿಂತ ಇಂದು ಅವಶ್ಯವಿದೆ ಎಂದು ಹೊಸಳ್ಳಿಯ ಬೂದೀಶ್ವರ ಸಂಸ್ಥಾನಮಠದ ಪೂಜ್ಯ ಅಭಿನವ ಬೂದೀಶ್ವರ ಮಹಾಸ್ವಾಮಿಗಳು ಹೇಳಿದರು.
ಅವರು ಗುರುವಾರ ಗದಗ ತಾಲೂಕಿನ ಹೊಳ್ಳಿಯ ಬೂದೀಶ್ವರ ಸಂಸ್ಥಾನಮಠದಲ್ಲಿ ಅಖಿಲ ಭಾರತ ಲಿಂಗಾಯತ ಮಹಾಸಭಾ ಗದಗ ಜಿಲ್ಲಾ ಘಟಕದ ಮಾಸಿಕ ಸಭೆ ಹಾಗೂ ನೂತನ ವರ್ಷದ ದಿನದರ್ಶಿಕೆಯ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ, ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಎಲ್ಲರೂ ಧರ್ಮವಂತರಾಗಬೇಕು, ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು, ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ರೂಢಿಸಿ ಉತ್ತಮ ಶಿಕ್ಷಣ ನೀಡಬೇಕು. ವೀರಶೈವ, ಲಿಂಗಾಯತರೆಲ್ಲರೂ ಲಿಂಗವನ್ನು ಧರಿಸಬೇಕೆಂದರು.
ಗದುಗಿನಲ್ಲಿ ಮಹಾಸಭಾದ ಉದ್ದೇಶಿತ ಸಮುದಾಯ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ತೀವ್ರಗೊಳಿಸಿ ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು. ಅದಕ್ಕೆ ಬೇಕಿರುವ ಎಲ್ಲ ರೀತಿಯ ಸಂಪನ್ಮೂಲಗಳನ್ನು ಕ್ರೋಢೀಕರಣ ಮಾಡಿಕೊಂಡು ಸಮಾಜದ ಸದ್ಭಳಕೆ ಉಪಯೋಗ ಮಾಡಿಕೊಳ್ಳಲು ಜಿಲ್ಲಾ ಮತ್ತು ತಾಲೂಕ ಘಟಕಗಳ ಪದಾಧಿಕಾರಿಗಳು ಕಂಕಣ್ಣಬದ್ಧರಾಗಬೇಕು ಎಂದು ಆಶೀರ್ವದಿಸಿದರು.
ಸದಾಶಿವಯ್ಯ ಮದರಿಮಠ ಸಂದರ್ಭೋಚಿತವಾಗಿ ಮಾತನಾಡಿದರು. ಕೊನೆಗೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮುರುಘರಾಜೇಂದ್ರ ಬಡ್ನಿ ವಂದಿಸಿದರು. ಈ ಸಂದರ್ಭದಲ್ಲಿ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಸಂಗನಗೌಡ ಪಾಟೀಲ ಸೇರಿದಂತೆ ಗದಗ ಜಿಲ್ಲಾ ಘಟಕದ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳು, ಕಾರ್ಯಕಾರಿಣಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಸದಾಶಿವಯ್ಯ ಮದರಿಮಠ ಅವರು ಕಟ್ಟಡ ನಿರ್ಮಾಣದ ಉಸ್ತುವಾರಿಯನ್ನು ವಹಿಸಿಕೊಂಡು ಪೂರಕ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಫೆಬ್ರುವರಿ 9ರಂದು ಮಹಾಸಭಾದ ರಾಜ್ಯ ಅಧ್ಯಕ್ಷ ಶಂಕರ ಬಿದರಿ ಅವರು ಗದುಗಿಗೆ ಆಗಮಿಸಿ ಸಮಾಜ ಸಂಘಟನೆ, ಮುಂದಿನ ಕಾರ್ಯಯೋಜನೆಗಳ ಕುರಿತು ಮಾರ್ಗದರ್ಶನ ಮಾಡಲಿದ್ದಾರೆ. ಅಂದಿನ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲು ಶೀಘ್ರದಲ್ಲಿ ಸಭೆ ಜರುಗಿಸುವದಾಗಿ ಹೇಳಿದರು.



