ಬೆಂಗಳೂರು:- ಮಾಧ್ಯಮಗಳು ಮೂಢ ನಂಬಿಕೆಗಳನ್ನು ಬೆಂಬಲಿಸಬಾರದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು “ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರೆದ್ರಿ ಎಂದು ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದಷ್ಟು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಹೇಳಿದ್ದಾರೆ.
ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನೀವೆಲ್ಲರೂ ನಿಭಾಯಿಸಬೇಕು. ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ.
ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಢ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ.