ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸರ್ಕಾರಿ ಉರ್ದು ಮಾಧ್ಯಮ ಶಾಲೆಗಳಲ್ಲಿ ವರ್ಷಗಳಿಂದ ಖಾಲಿ ಇರುವ ಶಿಕ್ಷಕ ಹಾಗೂ ಅಗತ್ಯ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಉರ್ದು ಶಿಕ್ಷಣ ವ್ಯವಸ್ಥೆಗೆ ನ್ಯಾಯ ಒದಗಿಸಬೇಕು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ಎಸ್. ನಾಗರಕಟ್ಟಿ ಆಗ್ರಹಿಸಿದರು.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಅವರು, ಶಿಕ್ಷಕರ ಕೊರತೆಯಿಂದ ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿದೆ. ಸರ್ಕಾರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿರುವುದು ಸ್ವಾಗತಾರ್ಹವಾಗಿದ್ದು, ಉರ್ದು ಶಾಲೆಗಳ ಹುದ್ದೆಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದರು.
ಉರ್ದು ವಿಷಯದಲ್ಲಿ ಬಿ.ಎಡ್., ಟಿ.ಸಿ.ಎಚ್. ಸೇರಿದಂತೆ ಅಗತ್ಯ ವಿದ್ಯಾರ್ಹತೆ ಹೊಂದಿರುವ ಅನೇಕ ಅರ್ಹ ಅಭ್ಯರ್ಥಿಗಳು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಒಂದು ಕಡೆ ಶಿಕ್ಷಕರ ಕೊರತೆ, ಮತ್ತೊಂದೆಡೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗದ ಕೊರತೆ ಇರುವುದರಿಂದ ಸರ್ಕಾರ ಎರಡೂ ಸಮಸ್ಯೆಗಳಿಗೆ ಸಮಗ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಎಲ್ಲ ಸರ್ಕಾರಿ ಉರ್ದು ಮಾಧ್ಯಮ ಶಾಲೆಗಳ ಖಾಲಿ ಶಿಕ್ಷಕ ಹುದ್ದೆಗಳ ಸಂಪೂರ್ಣ ವಿವರ ಸಂಗ್ರಹಿಸಿ ತಕ್ಷಣ ಭರ್ತಿ ಮಾಡಬೇಕು. ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಸೂಕ್ತ ಅವಕಾಶ ಕಲ್ಪಿಸಬೇಕು. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನಿಯೋಜಿಸುವುದರ ಜತೆಗೆ ಶಿಕ್ಷಕೇತರ ಹುದ್ದೆಗಳನ್ನೂ ಹಂತ ಹಂತವಾಗಿ ಭರ್ತಿ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಇತರ ಮಾಧ್ಯಮದ ವಿದ್ಯಾರ್ಥಿಗಳಂತೆ ಸಮಾನ ಶೈಕ್ಷಣಿಕ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಉರ್ದು ಶಾಲೆಗಳ ಸಮಸ್ಯೆಯನ್ನು ಕೇವಲ ಒಂದು ಸಮುದಾಯದ ಬೇಡಿಕೆಯಾಗಿ ಪರಿಗಣಿಸದೆ, ಮಕ್ಕಳ ಶಿಕ್ಷಣದ ಹಕ್ಕು ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಒತ್ತಾಯಿಸಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಾಫರ ಡಾಲಾಯತ, ಮಹಬೂಬ್ ಬಾದಷಾ ಖಾಜಿ, ತಾಜುದ್ದೀನ್ ಪಾಪಣ್ಣವರ, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ದೊಡ್ಡಮನಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.



