ವಿಜಯಸಾಕ್ಷಿ ಸುದ್ದಿ, ಗದಗ: ಹುಲಕೋಟಿ, ಬಿಂಕದಕಟ್ಟಿ, ಅಸುಂಡಿ, ಕುರ್ತಕೋಟಿ ಭಾಗದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಅಧಿಕ ಅಭಿವೃದ್ಧಿ ಆಗಿದೆ. ಇದಕ್ಕೆಲ್ಲ ಜನಸಾಮಾನ್ಯರ ಒಗ್ಗಟ್ಟೇ ಕಾರಣವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.
ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದಲ್ಲಿ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾದ ಸಿ.ಸಿ ರಸ್ತೆ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿನ ಜನರ ಬದುಕಿನ ಜೀವನದ ಗುಣಮಟ್ಟ ಎತ್ತರಕ್ಕೇರಬೇಕು. ಬದುಕು ಹೆಚ್ಚು ಶಕ್ತಿಯುತವಾಗಬೇಕು. ಅವರ ಆರೋಗ್ಯ, ಬದುಕು ಸುಂದರವಾಗಿರಬೇಕೆಂದು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 60 ಸಾವಿರ ರೂ.ಗಳು ತಲುಪಲಿದ್ದು, ಆರ್ಥಿಕವಾಗಿ ಚೇತರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.
ಬಡತನವನ್ನು ಬೇರು ಸಮೇತ ಕಿತ್ತೊಗೆಯುವ ಸಂಕಲ್ಪದೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು. ಇದರಿಂದ ಬಡತನ ದೂರವಾಗಿ ನೆಮ್ಮದಿಯ ಬದುಕು ಕಾಣುವಂತಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.
ಹಿರೇಹಂದಿಗೋಳ ಗ್ರಾಮಸ್ಥರು ಸಾರ್ವಜನಿಕ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಚ್.ಕೆ. ಪಾಟೀಲ ಅವರು, ಗ್ರಾಮದ ಇನ್ನುಳಿದ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 40 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗುವುದು. ಏಪ್ರಿಲ್ನಲ್ಲಿ ಕೆಲಸ ಆರಂಭಿಸಿ ಜೂನ್ ತಿಂಗಳಿಗೆ ಪೂರ್ಣಗೊಳಿಸಲಾಗುವುದು ಎಂದು ಸ್ಥಳದಲ್ಲೇ ಭರವಸೆ ನೀಡಿದರು. ಅಲ್ಲದೇ ಸ್ಮಶಾನ ಅಭಿವೃದ್ಧಿಗಾಗಿ ಅಗತ್ಯವಿರುವ ಅಷ್ಟೂ ಅನುದಾನವನ್ನು ನೀಡಲಾಗುವುದು. ಇದರೊಂದಿಗೆ ಸಮುದಾಯ ಭವನಕ್ಕೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಂಕದಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಪರಪ್ಪನವರ, ಉಪಾಧ್ಯಕ್ಷೆ ದ್ಯಾಮವ್ವ ಯರಟ್ಟಿ, ರವಿ ಮೂಲಿಮನಿ, ಎಂ.ಐ. ಪಾಟೀಲ, ವಿ.ಬಿ. ಜಕ್ಕನಗೌಡ್ರ, ಎಂ.ಬಿ. ಚುರ್ಚಿಹಾಳ, ಡಿ.ಬಿ. ಕುಲಕರ್ಣಿ, ಎಂ.ಎಸ್. ಪಾಟೀಲ, ಬಸಯ್ಯ ಯಲಬುರ್ಗಿಮಠ, ಎಸ್.ಎನ್. ಪಾಟೀಲ, ಬಿ.ಟಿ. ಖಾನಾಪುರ, ಆರ್.ಎಚ್. ಪಾಟೀಲ, ಎಂ.ಎಚ್. ಮಡಿಕೇರಿ ಸೇರಿದಂತೆ ಗ್ರಾಮದ ಹಿರಿಯರು, ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.
ಕೇಂದ್ರ ಸರ್ಕಾರ ಮನರೇಗಾ ಉದ್ಯೋಗ ಖಾತ್ರಿ ಯೋಜನೆಯ ಕಾನೂನನ್ನು ರದ್ದುಪಡಿಸಿದೆ. ಇದು ಜನಸಾಮಾನ್ಯರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿದೆ. ಈ ಮೊದಲಿದ್ದ ಕಾನೂನು ಹಾಗೂ ಯೋಜನೆ ಮರುಸ್ಥಾಪನೆಯಾಗಲಿ ಎಂದು ಇದೇ ಸಂದರ್ಭದಲ್ಲಿ ಸಚಿವ ಎಚ್.ಕೆ. ಪಾಟೀಲ ಒತ್ತಾಯಿಸಿದರು.



