ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವೀರೇಶ್ವರ ಪುಣ್ಯಾಶ್ರಮದ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನದ ಕಾಮಗಾರಿ ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಬಗ್ಗೆ ವಿಧಾನ ಪರಿಷತ್ನಲ್ಲಿ ಮಾ.13ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಧಾನ ಪರಿಷತ್ ಸದಸ್ಯರಾದ ಪ್ರೊ. ಎಸ್.ವಿ. ಸಂಕನೂರ, ಈ ಕಾಮಗಾರಿಗೆ ಅಗತ್ಯವಾದ ಅನುದಾನವನ್ನು ಕೂಡಲೇ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರನ್ನು ಒತ್ತಾಯಿಸಿದರು.
ನಗರದ ವೀರೇಶ್ವರ ಪುಣ್ಯಾಶ್ರಮದ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರರುವ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನದ ಕಾಮಗಾರಿಗೆ ಸರಕಾರ ಈಗಾಗಲೇ 6.24 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದು, ಕಟ್ಟಡ ಪೂರ್ಣಗೊಳ್ಳಲು ಇನ್ನೂ 5ರಿಂದ 7 ಕೋಟಿ ರೂ. ಹೆಚ್ಚುವರಿಯಾಗಿ ಬೇಕಿದೆ. ಸರಕಾರಕ್ಕೆ 5 ಕೋಟಿ ರೂಪಾಯಿ ಏನೂ ದೊಡ್ಡದಲ್ಲ. ಅಂಧ, ಅನಾಥ ಮಕ್ಕಳಿಗೆ ಬೆಳಕು ನೀಡಿದ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ ಲಿಂಗೈಕ್ಯ ಪುಟ್ಟರಾಜ ಗವಾಯಿಗಳ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲದರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದರು.
ಹೆಚ್ಚುವರಿ ಅನುದಾನ ಬಿಡುಗಡೆಗೆ ಸರಕಾರಕ್ಕೆ ಮನವಿ ಸಲ್ಲಿಸಿದರೂ ಬಿಡುಗಡೆಯಾಗದ ಹಿನ್ನೆಲೆಯಲ್ಲಿ, ಗದುಗಿನಲ್ಲಿ ಭಕ್ತರು ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕೊಟ್ಟಿರುವುದಾಗಿ ಪತ್ರಿಕೆಗಳಲ್ಲಿ ಈಗಾಗಲೇ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಬೇಗನೆ ಅನುದಾನ ಬಿಡುಗಡೆ ಮಾಡಿ ಪುಟ್ಟರಾಜ ಸ್ಮಾರಕ ಭವನ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಎಸ್.ವಿ. ಸಂಕನೂರ ಒತ್ತಾಯಿಸಿದರು.
ಪ್ರೊ. ಸಂಕನೂರ ಅವರ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಉತ್ತರ ನೀಡಿದ್ದು, ಕೂಡಲೇ ತಮ್ಮ ಇಲಾಖೆ ಅಧಿಕಾರಿಗಳನ್ನು ಗದಗ ನಗರಕ್ಕೆ ಕಳಿಸಿ ಪುಟ್ಟರಾಜ ಸ್ಮಾರಕ ಭವನ ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅಗತ್ಯ ಹಣದ ಮಾಹಿತಿ ಪಡೆದು ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.