ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಸುಮಾರು 36 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ED) ವಿಚಾರಣೆ ಎದುರಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಇ.ಡಿ ಶೋಧ ಹಾಗೂ ವಿಚಾರಣೆ ಇದೀಗ ಅಂತ್ಯಗೊಂಡಿದೆ.
ಬುಧವಾರ ತಡರಾತ್ರಿ 2 ಗಂಟೆಯವರೆಗೆ ಸತೀಶ್ ಜಾರಕಿಹೊಳಿ ಅವರನ್ನು ವಿಚಾರಣೆ ನಡೆಸಿದ್ದ ಇ.ಡಿ ಅಧಿಕಾರಿಗಳು, ಗುರುವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ್ದರು. ಈ ವೇಳೆ ಸಚಿವರಿಗೆ ಸಂಬಂಧಿಸಿದ ವಿದೇಶಿ ವ್ಯವಹಾರಗಳು, ಹೂಡಿಕೆಗಳು ಹಾಗೂ ಹಣಕಾಸಿನ ವಹಿವಾಟುಗಳ ಕುರಿತು ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಶೋಧದ ವೇಳೆ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ₹3 ಕೋಟಿಗೂ ಅಧಿಕ ಹಣ ಪತ್ತೆಯಾಗಿದ್ದು, ಇ.ಡಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ್ನಲ್ಲಿರುವ ಸಚಿವರ ನಿವಾಸದಲ್ಲಿ ಪತ್ತೆಯಾದ ಹಣವನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಎರಡು ಟ್ರಂಕ್ಗಳನ್ನು ತಂದಿದ್ದರು ಎನ್ನಲಾಗಿದೆ.
ಇದೇ ವೇಳೆ, ಆಫ್ರಿಕಾದ ರುವಾಂಡಾದಲ್ಲಿನ ಗಣಿಗಾರಿಕೆ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳ ಬಗ್ಗೆಯೂ ಇ.ಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸಚಿವರ ನಿವಾಸ ಸೇರಿದಂತೆ ಸಂಬಂಧಿತ ಸ್ಥಳಗಳಲ್ಲಿ ಪತ್ತೆಯಾದ ಹಲವು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಸಚಿವರ ಸಿಎಗಳಾದ ಪ್ರದೀಪ್ ಕುಮಾರ್ ಇಂಡಿ ಹಾಗೂ ಸೈದಪ್ಪ ಗದಾಡಿ ಅವರನ್ನು ಕೂಡ ಇ.ಡಿ ಅಧಿಕಾರಿಗಳು ಕರೆಸಿಕೊಂಡು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.
ಈ ಮಧ್ಯೆ, ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ನಿವಾಸಕ್ಕೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭೇಟಿ ನೀಡಿದ್ದರು. ಆದರೆ, ಇ.ಡಿ ಅಧಿಕಾರಿಗಳು ಅವರಿಗೆ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.
ಇ.ಡಿ ವಿಚಾರಣೆ ಹಾಗೂ ಶೋಧದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ದಲಿತ ಸಮುದಾಯದವರು ಧಾರವಾಡ, ಚಾಮರಾಜನಗರ, ಗದಗ, ಹಾವೇರಿ ಮತ್ತು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ, 36 ಗಂಟೆಗಳ ವಿಚಾರಣೆ ಬಳಿಕ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಇ.ಡಿ ಶೋಧ ಅಂತ್ಯಗೊಂಡಿದ್ದು, ಹಣ ಹಾಗೂ ದಾಖಲೆಗಳ ಜಪ್ತಿ ಮುಂದಿನ ತನಿಖೆಯಲ್ಲಿ ಮಹತ್ವ ಪಡೆದುಕೊಂಡಿದೆ.



