HomeGadag Newsಶಾಸಕ ಡಾ. ಚಂದ್ರು ಲಮಾಣಿ ಶಾಸಕ ಸ್ಥಾನದಿಂದ ಅಮಾನತ್ತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಶಾಸಕ ಡಾ. ಚಂದ್ರು ಲಮಾಣಿ ಶಾಸಕ ಸ್ಥಾನದಿಂದ ಅಮಾನತ್ತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸೋಮವಾರ ಶಿರಹಟ್ಟಿಯ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿಯವರನ್ನು ಶಾಸಕ ಸ್ಥಾನದಿಂದ ಅಮಾನತ್ತು ಮಾಡಿ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಗುತ್ತಿಗೆದಾರನಿಂದ ಕಮೀಷನ್ ಹಣ (ಲಂಚ) ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಿರಹಟ್ಟಿ ಮೀಸಲು ಮತಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಕಾಂಗ್ರೆಸ್ ಪಕ್ಷದ ನಾಯಕರ ಕೈವಾಡವಿದೆ ಎಂದು ಬೇರೊಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ಆಗಬಾರದು. ಭ್ರಷ್ಟಾಚಾರ ಮಾಡಿರುವ ವ್ಯಕ್ತಿ ತನ್ನ ತಪ್ಪನ್ನು ಒಪ್ಪಿಕೊಳ್ಳದೇ ಬೇರೊಬ್ಬರ ಮೇಲೆ ದೋಷಾರೋಪಣೆ ಮಾಡುವುದು ನೈತಿಕವಾಗಿ ಹಾಗೂ ಕಾನೂನುಬದ್ಧವಾಗಿ ತಪ್ಪಾಗಿದೆ. ಸಾರ್ವಜನಿಕ ಜೀವನದಲ್ಲಿರುವವರು ಹೇಗೆ ನಡೆದುಕೊಳ್ಳಬೇಕು ಎನ್ನುವ ಪರಿಜ್ಞಾನ ಇಲ್ಲದ ಶಾಸಕ ಪಾರದರ್ಶಕ ತನಿಖೆಗೆ ಸಹಕರಿಸಬೇಕು. ನೈತಿಕ ಹೊಣೆಗಾರಿಕೆ ವಹಿಸಿ ಶಾಸಕ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಉತ್ತರ ಕರ್ನಾಟಕದ ಇತಿಹಾಸದಲ್ಲೇ ತಾಲೂಕಿನಲ್ಲಿ ಯಾವ ಶಾಸಕರೂ ಇಂತಹ ಭ್ರಷ್ಟಾಚಾರದಲ್ಲಿ ಸಿಲುಕಿರುವುದು ಕಂಡುಬಂದಿಲ್ಲ. ಆದರೆ ಹೆಚ್ಚು ಕಲಿತು ವೈದ್ಯಕೀಯ ಸೇವೆ ಮಾಡಿರುವ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಭ್ರಷ್ಟಾಚಾರ ನಡೆಸಿ, ತನ್ನ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಕಮೀಷನ್ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿಲುಕಿ ತಾಲೂಕಿನ ಮರ್ಯಾದೆಯನ್ನು ಹರಾಜು ಹಾಕಿದ್ದಾರೆ. ಇವರು ಶಾಸಕ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಭ್ರಷ್ಟಾಚಾರ ನಡೆಸಿ ರೂ. 5 ಲಕ್ಷ ಹಣದ ಸಮೇತ ಅಧಿಕಾರಿಗಳ ಕೈಗೆ ಸಿಕ್ಕಿರುವುದರಿಂದ ನ್ಯಾಯಾಧೀಶರ ಆದೇಶದಂತೆ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದು, ಶಾಸಕ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹುಮಾಯೂನ್ ಮಾಗಡಿ, ಡಿ.ಕೆ. ಹೊನ್ನಪ್ಪನವರ, ಚನ್ನಪ್ಪ ಜಗಲಿ, ವಿರೇಂದ್ರ ಪಾಟೀಲ, ಶಿವನಗೌಡ ಪಾಟೀಲ, ಮಂಜುನಾಥ ಘಂಟಿ ಮಾತನಾಡಿದರು.

ಇದಕ್ಕೂ ಮೊದಲು ಪಟ್ಟಣದ ಶ್ರೀ ಮಾರುತಿ ದೇವಸ್ಥಾನದಿಂದ ಬೃಹತ್ ಪ್ರತಿಭಟನೆ ನಡೆಸಿ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನೆಹರು ವೃತ್ತದ ಮಾರ್ಗವಾಗಿ ತಮಟೆ ಬಾರಿಸುತ್ತ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗುತ್ತಾ ತಹಸೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ಮನವಿ ಸಲ್ಲಿಸಿದರು.

ಮುಖಂಡರಾದ ಮಹೇಂದ್ರ ಮುಂಡವಾಡ, ಲಕ್ಷ್ಮಣಗೌಡ ಪಾಟೀಲ, ಫಕ್ಕಿರೇಶ ಮ್ಯಾಟಣ್ಣವರ, ಚನ್ನಪ್ಪ ಜಗಲಿ, ವಿರೂಪಾಕ್ಷ ನಂದೆಣ್ಣವರ, ಹೊನ್ನಪ್ಪ ಶಿರಹಟ್ಟಿ, ಬುಡನಶ್ಯಾ ಮಕಾನದಾರ, ಶಿವನಗೌಡ ಪಾಟೀಲ, ರಮೇಶ ನಿರ್ವಾಣಶೆಟ್ಟರ, ಎಂ.ಕೆ. ಲಮಾಣಿ, ಮಹಾಂತೇಶ ದಶಮನಿ, ಅಜ್ಜುಗೌಡ್ರ ಪಾಟೀಲ, ಸೋಮನಗೌಡ ಮರಿಗೌಡ್ರ, ಚಾಂದಸಾಬ ಮುಳಗುಂದ, ದೇವಪ್ಪ ಲಮಾಣಿ, ಅಶ್ರತಅಲಿ ಢಾಲಾಯತ, ಮಾಬೂಸಾಬ ಲಕ್ಷ್ಮೇಶ್ವರ, ಈರಣ್ಣ ಚವ್ಹಾಣ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತ ದೊಡ್ಡಮನಿ ಮಾತನಾಡಿ, ಶಾಸಕ ಚಂದ್ರು ಲಮಾಣಿ ಮಾಡಬಾರದ ಕೆಲಸ ಮಾಡಿ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಸಚಿವ ಎಚ್.ಕೆ. ಪಾಟೀಲರನ್ನು ದೂರುತ್ತಿರುವುದು ಸರಿಯಲ್ಲ. ನಿಮ್ಮ ತಪ್ಪು ಮುಚ್ಚಿಕೊಳ್ಳಲು ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!