ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ತಹಸೀಲ್ದಾರ ಕಛೇರಿಗೆ ಶಾಸಕ ಡಾ.ಚಂದ್ರು ಲಮಾಣಿ ಗುರುವಾರ ಧಿಡೀರ್ ಭೇಟಿ ನೀಡಿ ಕಾರ್ಯವೈಖರಿ ಪರಿಶೀಲಿಸಿ, ತಹಸೀಲ್ದಾರರೊಂದಿಗೆ ಚರ್ಚಿಸಿದರು.
ತಾಲೂಕು ಕಚೇರಿಗೆ ತಮ್ಮ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದ ಸಾರ್ವಜನಿಕರ ಕುಂದು-ಕೊರತೆ ಅಹವಾಲುಗಳನ್ನು ಆಲಿಸಿದರು. ವೃದ್ಧಾಪ್ಯ, ವಿಧವಾ, ಅಂಗವಿಕಲ ಪಿಂಚಣಿ ಸೇರಿ ಸರ್ಕಾರದ ಸೌಲಭ್ಯ, ದಾಖಲೆಗಾಗಿ ಅರ್ಜಿ ಸಲ್ಲಿಸಲು ಬಂದ ಸಾರ್ವಜನಿಕರ ಸಮಸ್ಯೆ ಆಲಿಸಿ ಸ್ಥಳದಲ್ಲಿದ್ದ ತಹಸೀಲ್ದಾರ ಮತ್ತು ಅಧಿಕಾರಿ/ಸಿಬ್ಬಂದಿಗಳಿಗೆ ಜನರನ್ನು ಪದೇ ಪದೇ ಕಚೇರಿಗೆ ಎಡತಾಕಿಸದಂತೆ ಕಾರ್ಯ ಮುಗಿಸಿಕೊಡಬೇಕು.
ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗದಂತೆ ಕ್ರಮ ವಹಿಸಲು ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲ ಇಲಾಖೆಗಳಲ್ಲಿ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಡತಗಳ ವಿಲೇವಾರಿ ತಡವಾಗದಂತೆ ಸೂಚಿಸಿದ್ದೇನೆ. ಇನ್ನೂ ಅನೇಕ ರೈತರಿಗೆ ಬೆಳೆಹಾನಿ, ವಿಮೆ ಪರಿಹಾರ ಸರಿಯಾಗಿ ಜಮೆಯಾಗಿಲ್ಲ ಎನ್ನುವ ದೂರುಗಳಿವೆ. ಅದರ ಬಗ್ಗೆ ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಕಳೆದ ವರ್ಷದ ಬರಗಾಲದಿಂದ ನೊಂದಿರುವ ರೈತರಿಗೆ ಪರಿಹಾರದ ಹಣ ಸರಿಯಾಗಿ ತಲುಪುವಂತೆ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಪರಿಹಾರ ದೊರಕದ ರೈತರ ಮಾಹಿತಿ ಕಲೆಹಾಕಿ ಎಂದು ಸೂಚನೆ ನೀಡಿದರು.
ತಹಸೀಲ್ದಾರ ವಾಸುದೇವ ಸ್ವಾಮಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ ವಿಳಂಬವಾಗಿದ್ದರೂ ಸಹ ಅದಕ್ಕೆ ಪರ್ಯಾಯ ಮಾರ್ಗದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಪರಿಹಾರದ ಹಣ ಜಮೆಯಾಗದಿರುವ ರೈತರ ಮಾಹಿತಿ ಕಲೆ ಹಾಕಲಾಗುತ್ತಿದೆ. ಇಷ್ಟರಲ್ಲಿಯೇ ಮಾಹಿತಿ ಸಲ್ಲಿಸಲಾಗುವದು ಎಂದು ಹೇಳಿದರು. ಗ್ರೇಡ್ 2 ತಹಸೀಲ್ದಾರ ಮಂಜುನಾಥ ಅಮಾಸಿ, ಕಂದಾಯ ನಿರೀಕ್ಷಕ ಬಿ.ಎಂ. ಕಾತ್ರಾಳ ಸೇರಿದಂತೆ ಅನೇಕ ಅಧಿಕಾರಿಗಳು ರೈತರು ಹಾಜರಿದ್ದರು.