ವಿಜಯಸಾಕ್ಷಿ ಸುದ್ದಿ, ರೋಣ: ಮತಕ್ಷೇತ್ರದ ಗ್ರಾಮೀಣ ಭಾಗಗಳ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ದಿಶೆಯಲ್ಲಿ ಸವಡಿ ಗ್ರಾಮದಲ್ಲಿ 90 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಅರಹುಣಸಿ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.
ಅವರು ಬುಧವಾರ ಸವಡಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸವಡಿ ಗ್ರಾಮದ ಕಾಳಿಕಾದೇವಿ ಸಭಾಭವನ ನಿರ್ಮಾಣಕ್ಕೆ ಶಾಸಕರ ಅನುದಾನದಿಂದ 5 ಲಕ್ಷ ರೂಗಳನ್ನು ಬಿಡುಗಡೆಗೊಳಿಸಿದೆ. ಮುಖ್ಯವಾಗಿ ಸ್ಮಶಾನ ಅಭಿವೃದ್ಧಿ ಕುರಿತು ಗ್ರಾ.ಪಂ ಸದಸ್ಯರು ಉತ್ತಮ ನಿರ್ಧಾರ ಕೈಗೊಂಡಿದ್ದು ಸ್ವಾಗತರ್ಹ ಎಂದರು.
ಅರಹುಣಸಿ ಗ್ರಾಮದ ರಸ್ತೆ ಸುಧಾರಿಸಲು ಅಗತ್ಯ ಕ್ರಮ ಕೈಗೊಂಡಿದ್ದು, ಕೆಲ ದಿನಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗ್ರಾಮದ ಸರಕಾರಿ ಶಾಲೆಗೆ 2 ನೂತನ ಕೊಠಡಿಗಳನ್ನು ಮಂಜೂರು ಮಾಡಲಾಗಿದ್ದು, ಕಟ್ಟಡ ಕಾಮಗಾರಿ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದರು.
ಬಸವರಾಜ ನವಲಗುಂದ, ಯೂಸುಪ್ ಇಟಗಿ, ವಿ.ಬಿ. ಸೋಮನಕಟ್ಟಿಮಠ, ಅಭಿಷೇಕ ನವಲಗುಂದ ಸೇರಿದಂತೆ ಸವಡಿ ಹಾಗೂ ಅರಹುಣಸಿ ಗ್ರಾ.ಪಂ ಸದಸ್ಯರು, ಮುಖಂಡರು, ಗ್ರಾಮಸ್ಥರಿದ್ದರು.
ಸವಡಿ ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ 1 ಕೋಟಿ ರೂ ಅನುದಾನ ಮಂಜೂರಾಗಿದ್ದು, ಗ್ರಾಮಸ್ಥರ ಇಚ್ಛೆಯಂತೆ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿ, ಸಚಿವರುಗಳನ್ನು ಸಭೆಗೆ ಆಹ್ವಾನಿಸಿ, ಶೀಘ್ರವೇ ಶಾದಿ ಮಹಲ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು.
– ಜಿ.ಎಸ್. ಪಾಟೀಲ.
ಶಾಸಕರು, ರೋಣ.