ವಿಜಯಸಾಕ್ಷಿ ಸುದ್ದಿ, ರೋಣ : ಮಾ.2ರಂದು ನಡೆಯುವ ಸರಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸ್ಥಳಕ್ಕೆ ಶಾಸಕ ಜಿ.ಎಸ್. ಪಾಟೀಲ ಭೇಟಿ ನೀಡಿ ಪರಿಶೀಲಿಸಿ, ತಾಲೂಕಾ ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.
ಸಮಾವೇಶಕ್ಕೆ 20 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಈಗಾಗಲೇ ಬೃಹತ್ ಶಾಮಿಯಾನ್, 15 ಸಾವಿರ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. 18 ಊಟದ ಕೌಂಟರ್ಗಳನ್ನು ತೆರೆಯಲಾಗಿದ್ದು, ನಾಲ್ಕು ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಇನ್ನು ಬೃಹತ್ ಸಮಾವೇಶವನ್ನು ವೀಕ್ಷಿಸಲು ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಫಲಾನುಭವಿಗಳಿಗೆ ತಿಳಿಸಿಕೊಡಲು ನಾಲ್ಕು ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಗ್ಯಾರಂಟಿ ಯೋಜನೆಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ವಾಹನ ನಿಲುಗಡೆಗೆ ಎಂಆರ್ಬಿಸಿ ಪ್ರವಾಸಿ ಮಂದಿರದ ಆವರಣ ಹಾಗೂ ಪಕ್ಕದಲ್ಲಿರುವ ಖಾಸಗಿ ಜಮೀನುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ತಹಸೀಲ್ದಾರ್ ನಾಗರಾಜ.ಕೆ., ಕಿರಣಕುಮಾರ ಕುಲಕರ್ಣಿ, ಇಒ ರವಿ ಎ.ಎನ್., ಡಿ ಮೋಹನ್, ಸಿಪಿಐ ಎಸ್.ಎಸ್. ಬಿಳಗಿ, ಮುಖಂಡರಾದ ದಶರಥ ಗಾಣಿಗೇರ, ಪರಶುರಾಮ ಅಳಗವಾಡಿ, ಯೂಸುಪ್ ಇಟಗಿ, ವಿ.ಬಿ. ಸೋಮನಕಟ್ಟಿಮಠ, ಬಸವರಾಜ ನವಲಗುಂದ, ಸಂಗು ನವಲಗುಂದ, ಆನಂದ ಚಂಗಳಿ ಸೇರಿದಂತೆ ಅನೇಕ ಮುಖಂಡರಿದ್ದರು.
ಸಮಾವೇಶಕ್ಕೆ ಸಚಿವರಾದ ಹೆಚ್.ಕೆ. ಪಾಟೀಲ, ಲಕ್ಷ್ಮಿ ಹೆಬ್ಬಾಳ್ಕರ್, ಕೃಷ್ಣ ಭೈರೇಗೌಡ, ಸಂತೋಷ್ ಲಾಡ್, ಮುಖ್ಯ ಸಚೇತಕ ಸಲೀಂ ಅಹ್ಮದ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಶಾಸಕರು, ಮಾಜಿ ಶಾಸಕರು ಆಗಮಿಸಲಿದ್ದಾರೆ.