ಚಿಕ್ಕಮಗಳೂರು:– ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಆರ್ಭಟ ಜೋರಾಗಿದೆ. ಜಿಲ್ಲೆಯ ಜನರನ್ನು ಬೆಂಬಿಡದೆ ಕಾಡುತ್ತಿರುವ ಈ ಸೋಂಕು ಮತ್ತಿಬ್ಬರಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ರೋಗಿಗಳ ಸಂಖ್ಯೆ 6ಕ್ಕೆ ಏರಿಕೆ ಆಗಿದೆ.
ಎನ್ಆರ್ ಪುರ ತಾಲೂಕಿನ ಮೂವರಲ್ಲಿ, ಕೊಪ್ಪ ತಾಲೂಕಿನ ಇಬ್ಬರಲ್ಲಿ ಮತ್ತು ಚಿಕ್ಕಮಗಳೂರು ತಾಲೂಕಿನ ಓರ್ವನಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ. ಮಂಗನಕಾಯಿಲೆ ಚಿಕಿತ್ಸೆಗೆಂದು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಕೆಎಫ್ಡಿ ವಾರ್ಡ್ ತೆರೆದಿದೆ. ಆರೋಗ್ಯ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಗ್ರಾಮಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಜೊತೆಗೆ, ಆರೋಗ್ಯ ಇಲಾಖೆ ಸಿಬ್ಬಂದಿ ಮಂಗನ ಕಾಯಿಲೆ ಸೋಂಕು ಲಕ್ಷಣ ಕಂಡುಬಂದವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್ ರವಾನಿಸಿದ್ದಾರೆ.
ಮಂಗನ ಕಾಯಿಲೆ ಒಂದು ವಾರದ ಹಿಂದೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿತ್ತು. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಬಂದಿರುವ ದೃಢವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್ಆರ್ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಲಾಗಿದೆ.