ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಸುಮಾರು ಆರು ತಿಂಗಳ ಬಳಿಕ ಜಲಾಶಯಕ್ಕೆ ಉತ್ತಮ ಪ್ರಮಾಣದಲ್ಲಿ ನೀರು ಹರಿದುಬಂದಿದ್ದು, ರೈತರು ಹಾಗೂ ಜನರಲ್ಲಿ ಆಶಾಭಾವನೆ ಮೂಡಿಸಿದೆ.
ನಿನ್ನೆ 1,449 ಕ್ಯೂಸೆಕ್ ಇದ್ದ ಒಳಹರಿವು ಇಂದು 4,291 ಕ್ಯೂಸೆಕ್ಗೆ ಏರಿಕೆಯಾಗಿದೆ. ಕಾವೇರಿ ಕೊಳ್ಳದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕೆಆರ್ಎಸ್ಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಪ್ರಸ್ತುತ ಜಲಾಶಯದಲ್ಲಿ 764 ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಸದ್ಯ 80.90 ಅಡಿ ನೀರು ಸಂಗ್ರಹವಾಗಿದೆ.
ಕೆಆರ್ಎಸ್ ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಇದ್ದು, ಪ್ರಸ್ತುತ 11.487 ಟಿಎಂಸಿ ನೀರು ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕೆಆರ್ಎಸ್ ಜಲಾಶಯದ ಇಂದಿನ ಮಾಹಿತಿ:
- ಗರಿಷ್ಠ ನೀರಿನ ಮಟ್ಟ: 124.80 ಅಡಿ
- ಪ್ರಸ್ತುತ ನೀರಿನ ಮಟ್ಟ: 80.90 ಅಡಿ
- ಒಳಹರಿವು: 4,291 ಕ್ಯೂಸೆಕ್
- ಹೊರಹರಿವು: 764 ಕ್ಯೂಸೆಕ್
- ಒಟ್ಟು ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
- ಪ್ರಸ್ತುತ ನೀರಿನ ಸಂಗ್ರಹ: 11.487 ಟಿಎಂಸಿ



