ಉಡುಪಿ: ಒಂದು ತಿಂಗಳ ಕಾಲ ಮಳೆಯ ಕೊರತೆಯಿಂದ ಕಂಗೆಟ್ಟಿದ್ದ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳು ತುಂಬಿ ಹರಿಯುತ್ತಿದ್ದು, ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ.
ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾದ ಸ್ವರ್ಣಾ ನದಿ ಈಗ ಮೈದುಂಬಿ ಹರಿಯುತ್ತಿದೆ. ಹಿರಿಯಡ್ಕ ಸಮೀಪದ ಬಜೆ ಅಣೆಕಟ್ಟು ಕೂಡ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರಹರಿಸಲಾಗುತ್ತಿದೆ.
ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಮಳೆಯ ಕೊರತೆ ಕಂಡುಬಂದಿದ್ದರೂ, ಪಶ್ಚಿಮ ಘಟ್ಟದಲ್ಲಿ ಸುರಿದ ಉತ್ತಮ ಮಳೆಯ ಪರಿಣಾಮ ಸ್ವರ್ಣಾ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆಯಾಗಿದೆ.
ಬ್ರಹ್ಮಾವರ ಭಾಗದ ಸೀತಾನದಿ, ಪಾಪನಾಶಿನಿ ಹಾಗೂ ಪಿನಾಕಿನಿ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದೆ. ತಡವಾಗಿಯಾದರೂ ಉತ್ತಮ ಮಳೆಯಾಗಿರುವುದರಿಂದ ಭತ್ತದ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳು ಮತ್ತೆ ಚುರುಕುಗೊಂಡಿದ್ದು, ರೈತರಲ್ಲಿ ಉತ್ತಮ ಬೆಳೆ ನಿರೀಕ್ಷೆ ಮೂಡಿದೆ.
ಆದರೆ ಮುಂದಿನ ಎರಡು ದಿನಗಳ ಕಾಲ ರೆಡ್ ಅಲರ್ಟ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ನದಿ, ಹೊಳೆ, ತೋಡು ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಸುರಕ್ಷತೆಗೆ ಆದ್ಯತೆ ನೀಡಿ, ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.



