ಬೆಂಗಳೂರು:– ಇಂದಿನಿಂದ ಮುಂಗಾರು ಅಧಿವೇಶನ ಶುರುವಾಗ್ತಿದ್ದು, ಕಾಂಗ್ರೆಸ್ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಣತಂತ್ರ ರೂಪಿಸಿದೆ.
ಕಾಲ್ತುಳಿತ ಪ್ರಕರಣ, ಧರ್ಮಸ್ಥಳ ಕೇಸ್ ಕುರಿತು ಭಾರೀ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಆರಂಭದ ದಿನವೇ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸದನದ ಒಳಗೆ ಮತ್ತು ಹೊರಗೆ ಶಕ್ತಿ ಪ್ರದರ್ಶನಕ್ಕೆ ಮೈತ್ರಿ ನಾಯಕರು ಮುಂದಾಗಿದ್ದಾರೆ. ನಿನ್ನೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರಿಂದ ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ತಂತ್ರ ರೂಪಿಸಲಾಗಿದೆ ಎಂದು ಹೇಳಲಾಗ್ತಿದೆ.
ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ಕಾರಣ ಎಂದು ವಿಪಕ್ಷಗಳು ಆರೋಪ ಮಾಡಿದ್ದು, ಈ ಬಗ್ಗೆ ಭಾರೀ ಚರ್ಚೆಯಾಗುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಮತಗಳ್ಳತನ ಆರೋಪವನ್ನೇ ಮೈತ್ರಿ ನಾಯಕರ ಮೊದಲ ದಿನದ ಅಜೆಂಡಾ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಮತ್ತು ಜೆಡಿಎಸ್ಗಳು ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿದ್ದಾರೆ. ಅಧಿವೇಶನದ ಮೊದಲ ದಿನ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಬಳಿಕ ಉಭಯ ಕಲಾಪ ಪ್ರವೇಶಿಸಲು ಪ್ಲಾನ್ ಮಾಡಿದ್ದಾರೆ.
ಜೊತೆಗೆ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ವೈಫಲ್ಯ ಮತ್ತು ರಾಜ್ಯದಲ್ಲಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಸಿಗದ ಬಗ್ಗೆ ಚರ್ಚೆಯಾಗಲಿದೆ. ಬೆಲೆ ಏರಿಕೆ, ದಲಿತರ ಹಣ ದುರುಪಯೋಗ ಕುರಿತು ಪ್ರಸ್ತಾಪವಾಗುವ ಸಾಧ್ಯತೆ ಇದೆ. ಕಾಂಗ್ರೆಸ್, ಬಿಜೆಪಿ, ಮತ್ತು ಜೆಡಿಎಸ್ ಶಾಸಕರ ನಡುವೆ ಅನುದಾನ ತಾರತಮ್ಯ ಹಾಗೂ ಸಚಿವರು ಮತ್ತು ಶಾಸಕರ ನಡುವೆ ಅಸಮಾಧಾನದ ವಿಚಾರಗಳ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯೋ ಸಾಧ್ಯತೆ ಇದೆ.