ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ವ್ಯಾಪ್ತಿಯ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ 2.0 ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪಟ್ಟಣದ 1ನೇ ವಾರ್ಡಿನ ರಾಜವಾಡೆ ಮುಂಭಾಗದಲ್ಲಿ ಅಂದಾಜು ರೂ.3242 ಲಕ್ಷ ವೆಚ್ಚದ ಅಮೃತ್-2.0ರ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ವಿತರಣಾ ಕೊಳವೆ ಮಾರ್ಗ ಅಳವಡಿಸುವ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು.
ಅಮೃತ್ 2.0 ಯೋಜನೆ 9230 ಕೋಟಿ ರೂಪಾಯಿ ವೆಚ್ಚದ್ದಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ 4615 ಕೋಟಿ ಹಾಗೂ ರಾಜ್ಯ ಸರ್ಕಾರವು 3692 ಕೋಟಿ ಸಹಯೋಗ ನೀಡಲಿದೆ. ಉಳಿದ 927 ಕೋಟಿ ರೂ ಹಣವನ್ನು ಸ್ಥಳೀಯ ಸಂಸ್ಥೆಗಳು ಭರಿಸುತ್ತವೆ. ರಾಜ್ಯದಲ್ಲಿ ಲಕ್ಷಕಿಂತ ಕಡಿಮೆ ಇರುವ 287 ಸ್ಥಳೀಯ ಸಂಸ್ಥೆಗಳ ಪೈಕಿ 248 ಸಂಸ್ಥೆಗಳ ವ್ಯಾಪ್ತಿಯ ಮನೆಗಳಿಗೆ ನೀರು ಪೂರೈಸಲಾಗುವುದು ಎಂದ ಅವರು, ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದಲ್ಲಿ ಅವಶ್ಯಕವಾಗಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಪುರಸಭೆ ಸದಸ್ಯ ರಾಜು ಸಾಂಗ್ಲೀಕರ ಅವರು ಪಟ್ಟಣಕ್ಕೆ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಸೌಲಭ್ಯವನ್ನು ದೊರಕಿಸಲು ಸಂಸದ ಬಸವರಾಜ ಬೊಮ್ಮಾಯಿ ಅವರು ಮುಂದಾಗಬೇಕು ಎಂದು ಮನವಿ ನೀಡಿದರು.
ಪುರಸಭೆ ವಿಪಕ್ಷ ನಾಯಕ ಮುರ್ತುಜಾ ಡಾಲಾಯತ್, ಸದಸ್ಯರಾದ ಸುಭಾಸ ಮ್ಯಾಗೇರಿ, ಶಿವರಾಜ ಘೋರ್ಪಡೆ, ಮುದಿಯಪ್ಪ ಮುದೋಳ, ಯಮನೂರ ತಿರಕೋಜಿ, ರೂಪ್ಲೇಶ ರಾಠೋಡ ಹಾಗೂ ಸಿದ್ದಪ್ಪ ಬಂಡಿ, ಎಚ್.ಎಸ್. ಸೋಂಪುರ, ಬಿ.ಎಂ. ಸಜ್ಜನರ, ದುರಗಪ್ಪ ಮುಧೋಳ, ಬಿ.ಎಸ್. ಶೀಲವಂತರ, ಉಮೇಶ ರಾಠೋಡ ಸೇರಿ ಇತರರು ಇದ್ದರು.
ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ಮತಕ್ಷೇತ್ರದಲ್ಲಿ ರಸ್ತೆ, ನೀರು ಸೇರಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರವು ಕಾರ್ಯ ನಿರ್ವಹಿಸುತ್ತಿರುವ ಪರಿಣಾಮ ಕ್ಷೇತ್ರದ ಜನತೆಗೆ ಅಮೃತ್ 2.0 ಯೋಜನೆ ಅಡಿಯಲ್ಲಿ ಗಜೇಂದ್ರಗಡ ಪಟ್ಟಣದ ವ್ಯಾಪ್ತಿಯ ಮನೆಗಳಿಗೆ ನೀರು ಪೂರೈಸಲು ಚಾಲನೆ ನೀಡಲಾಗಿದೆ. ಅಧಿಕಾರಿಗಳು ಯೋಜನೆ ಲಾಭವನ್ನು ಜನತೆಗೆ ಸಕಾಲದಲ್ಲಿ ತಲುಪಿಸಲು ಮುಂದಾಗಬೇಕು ಎಂದರು.