ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಲಾಗಿದ್ದ 50:50 ಅನುಪಾತದ ಬದಲಿ ನಿವೇಶನಗಳ ಹಂಚಿಕೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆದೇಶ ಹೊರಡಿಸಿದೆ.
ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸು ಹಾಗೂ ಉನ್ನತ ಮಟ್ಟದ ತಾಂತ್ರಿಕ ಸಮಿತಿ ಸಲ್ಲಿಸಿರುವ ವರದಿಯನ್ನು ಆಧರಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. 2023ರ ಮಾರ್ಚ್ 14ರಂದು ನೀಡಿದ್ದ ನಿರ್ದೇಶನಗಳನ್ನು ಉಲ್ಲಂಘಿಸಿ ಮಾಡಲಾಗಿರುವ ಎಲ್ಲಾ 50:50 ಬದಲಿ ನಿವೇಶನಗಳ ಹಂಚಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ.
ಈಗಾಗಲೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿಯಾಗಿರುವ ನಿಯಮಬಾಹಿರ ಬದಲಿ ನಿವೇಶನಗಳ ಕ್ರಯಪತ್ರಗಳನ್ನು ರದ್ದುಪಡಿಸಲು ಸಿವಿಲ್ ನ್ಯಾಯಾಲಯದಲ್ಲಿ ತಕ್ಷಣವೇ ದಾವೆ ಹೂಡುವಂತೆ ಸರ್ಕಾರ ಸೂಚಿಸಿದೆ.
ಇನ್ನೂ ಕ್ರಯಪತ್ರ ನೋಂದಣಿಯಾಗದ ಪ್ರಕರಣಗಳಲ್ಲಿ ಸರ್ಕಾರದಿಂದ ಸ್ಪಷ್ಟ ಮಾರ್ಗಸೂಚಿ ಹಾಗೂ ಮುಂದಿನ ನಿರ್ದೇಶನ ಹೊರಬರುವವರೆಗೆ ಯಾವುದೇ ಕ್ರಯಪತ್ರ ನೀಡದಂತೆ ಮುಡಾಗೆ ಸೂಚಿಸಲಾಗಿದೆ.
ಈಗಾಗಲೇ ನೋಂದಣಿಯಾಗಿರುವ ನಿವೇಶನಗಳಿಗೆ ಖಾತಾ ಮಾಡಿಕೊಡುವುದನ್ನೂ ತಡೆಹಿಡಿಯುವಂತೆ ಮೈಸೂರು ಮಹಾನಗರ ಪಾಲಿಕೆ, ಸಂಬಂಧಪಟ್ಟ ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲು ಸೂಚಿಸಲಾಗಿದೆ.
ಒಂದು ವೇಳೆ ಈಗಾಗಲೇ ಖಾತಾ ಮಾಡಿಕೊಟ್ಟಿದ್ದರೆ, ಕರ್ನಾಟಕ ನಗರ ಪಾಲಿಕೆಗಳ ಕಾಯ್ದೆ 1976, ಕರ್ನಾಟಕ ಮುನಿಸಿಪಲ್ ಕಾಯ್ದೆ 1961 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಅಡಿಯಲ್ಲಿ ನಿಯಮಾನುಸಾರ ಖಾತಾ ರದ್ದುಪಡಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಸರ್ಕಾರದ ಆದೇಶದನ್ವಯ ಕೈಗೊಂಡಿರುವ ಕ್ರಮಗಳ ಕುರಿತು ಅನುಪಾಲನಾ ವರದಿಯನ್ನು ತಕ್ಷಣ ಸರ್ಕಾರಕ್ಕೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಆದೇಶ ಪಾಲನೆಯಲ್ಲಿ ವಿಫಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಮುಡಾದಲ್ಲಿ ಸುಮಾರು 1,100 50:50 ಬದಲಿ ನಿವೇಶನಗಳ ಹಂಚಿಕೆ ರದ್ದುಗೊಳಿಸಲು ಸರ್ಕಾರ ನಿರ್ದೇಶನ ನೀಡಿದ್ದು, ಈ ನಿವೇಶನಗಳ ಒಟ್ಟು ಮೌಲ್ಯ ಸುಮಾರು ₹2,000 ಕೋಟಿ ಎಂದು ಅಂದಾಜಿಸಲಾಗಿದೆ.



