ಬೆಂಗಳೂರು:– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಿದ್ದು, ತೀರ್ಪು ಕಾಯ್ದಿರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ತೀರ್ಪು ಕಾಯ್ದಿರಿಸಿ ಆದೇಶಿಸಿದ್ದಾರೆ. ಮುಂದಿನ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಯಲಿದೆ.
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು. ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಮಂಡನೆ ಮಾಡಿದ್ದಾರೆ.
ರಾಜ್ಯಪಾಲರು ಅತಿ ವಿರಳ ಸಂದರ್ಭದಲ್ಲಿ ಮಾತ್ರ ವಿವೇಚನಾಧಿಕಾರ ಬಳಸಬೇಕು. ರಾಜ್ಯಪಾಲರು ಜನರಿಂದ ಆಯ್ಕೆಯಾಗಿಲ್ಲ, ನೇಮಕಗೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಹೆಚ್ಚಿನ ಉತ್ತರದಾಯಿತ್ವ ಇದೆ ಎಂದು ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ತೀರ್ಪು ಉಲ್ಲೇಖಿಸಿದರು. ಈ ವೇಳೆ ರಾಷ್ಟ್ರಪತಿ ಆಳ್ವಿಕೆ ಹೇರಿದ ಪ್ರಕರಣಗಳು 17 ಎ ಕೇಸ್ಗಿಂತ ಗಂಭೀರವಲ್ಲವೇ? ಆರ್ಟಿಕಲ್ 356 ತೀರ್ಪುಗಳನ್ನು ಸೆ. 17 ಎ ಕೇಸ್ಗೆ ಉಲ್ಲೇಖಿಸುವುದು ಸೂಕ್ತವೇ ಎಂದು ಜಡ್ಜ್ ಪ್ರಶ್ನಿಸಿದ್ದಾರೆ.
ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯಪ್ರೇರಿತ. ಸೆ.17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಎಲ್ಲಾ ಪ್ರಕರಣಗಳಲ್ಲೂ ಸಚಿವ ಸಂಪುಟ ಸಿಎಂ ಪರ ತಾರತಮ್ಯ ಮಾಡಿದೆ ಎನ್ನಲಾಗದು. ಸಚಿವ ಸಂಪುಟದ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದಿದ್ದಾರೆ.
ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ಜಡ್ಜ್ ಕೇಳಿದ್ದಾರೆ. ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೇಕೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತವೆನ್ನಲಾಗದು ಎಂದು ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.