ಬೆಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನು ಮದುವೆ ಮಾತು ನಡೆದಿದ್ದ ಯುವಕನೇ ಕೊಲೆ ಮಾಡಿದ ದಾರುಣ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಶಬೀಲ್ (20) ಎಂಬಾತ ಪಾಳು ಬಿದ್ದ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಡಿಜೆ ಹಳ್ಳಿಯ ಸಕ್ಕರೆ ಮಂಡಿ ಪ್ರದೇಶದಲ್ಲಿರುವ ಪಾಳು ಬಿದ್ದ ಮನೆಗೆ ಯುವತಿಯನ್ನು ಕರೆತಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಶಬೀಲ್ ಅಪ್ರಾಪ್ತ ಬಾಲಕಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನು. ಘಟನೆ ನಡೆದ ದಿನ ಬೆಳಗ್ಗೆ ಸುಮಾರು 6.30ರ ವೇಳೆಗೆ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.
ಈ ಘಟನೆ ಆರೋಪಿಯ ಕುಟುಂಬಸ್ಥರಿಂದಲೇ ಬೆಳಕಿಗೆ ಬಂದಿದೆ. ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಡಿಜೆ ಹಳ್ಳಿ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿದಿದೆ.



