ಹಾಸನ: ಮದದಲ್ಲಿದ್ದ ಒಂಟಿ ಸಲಗವೊಂದು ಇಟಿಎಫ್ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಅಟ್ಟಾಡಿಸಿದ ಘಟನೆ ಬೇಲೂರು ತಾಲೂಕಿನ ಗಂಗಾವರ ಗ್ರಾಮದಲ್ಲಿ ನಡೆದಿದೆ. ಕಾಡಾನೆ ರಸ್ತೆ ದಾಟುವ ವೇಳೆ ಇಟಿಎಫ್ ಸಿಬ್ಬಂದಿ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿಕೊಂಡು ನಿಂತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸಲಗ ಜನರಿದ್ದ ಕಡೆಗೆ ನುಗ್ಗಿದ್ದು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಯದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಕಾಡಾನೆ ರಸ್ತೆ ದಾಟುತ್ತಿದ್ದ ವೇಳೆ ಎರಡು ಕಡೆಗಳಲ್ಲಿ ಸಾರಿಗೆ ಬಸ್, ಅರಣ್ಯ ಇಲಾಖೆ ಜೀಪ್ ಸೇರಿದಂತೆ ಹಲವು ವಾಹನಗಳನ್ನು ನಿಲ್ಲಿಸಲಾಗಿತ್ತು. ಜನರು ಸ್ಥಳದಲ್ಲಿದ್ದಾಗಲೇ ಸಲಗ ನುಗ್ಗಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದ ಶಾಲೆಯ ಮುಂಭಾಗ ಮತ್ತು ಮನೆಗಳ ಬಳಿಯೇ ಕಾಡಾನೆ ಸಂಚರಿಸಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಇದೇ ವೇಳೆ ಎರಡು ದೈತ್ಯಾಕಾರದ ಕಾಡಾನೆಗಳು ಮದದಲ್ಲಿರುವುದು ಕಂಡುಬಂದಿದ್ದು, ಅವುಗಳನ್ನು ಕಾಡಿನತ್ತ ಓಡಿಸಲು ಇಟಿಎಫ್ ಸಿಬ್ಬಂದಿ ಪಟಾಕಿ ಸಿಡಿಸುತ್ತಿದ್ದಾರೆ. ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಕಾಡಾನೆಗಳು ಚದುರಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಗಂಗಾವರ ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾಡಾನೆಗಳ ನಿರಂತರ ಹಾವಳಿಯಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ಆನೆಗಳ ಚಲನವಲನದ ಬಗ್ಗೆ ಇಟಿಎಫ್ ಸಿಬ್ಬಂದಿ ಮೈಕ್ ಮೂಲಕ ಅನೌನ್ಸ್ ಮಾಡಿ ಸ್ಥಳೀಯರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.



