ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿ ಮಠಗಳು ಜಾತಿ, ಧರ್ಮ, ಹೆಣ್ಣು, ಗಂಡು ಎಂಬ ಬೇದಭಾವವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿವೆ. ಮಠಗಳು ಹಸಿದವರಿಗೆ ಅನ್ನ ನೀಡಿವೆ, ಜ್ಞಾನ, ಸಂಸ್ಕಾರ ಕಲಿಸಿವೆ ಎಂದು ಡಾ. ಶ್ರೀಧರ ವಿ. ಕುರಡಗಿ ಹೇಳಿದರು.
ನಗರದ ಮುಳಗುಂದನಾಕಾ ಬಳಿಯ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ, ಶ್ರೀದೇವಿ ಪುರಾಣ ಪ್ರವಚನ ಹಾಗೂ ದುರ್ಗಾಷ್ಟಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗದಗ-ಬೆಟಗೇರಿ ಅವಳಿ ನಗರದ ಅಡವೀಂದ್ರಸ್ವಾಮಿ ಮಠದಲ್ಲಿ ನವರಾತ್ರಿಯ ಸಂದರ್ಭದಲ್ಲಿ ಶ್ರೀದೇವಿಯ ಆರಾಧನೆಯ ಮೂಲಕ ಮಹಿಳೆಯರಲ್ಲಿ ದೈವಭಕ್ತಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಶ್ರೀಮಠದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಜಾತ್ರೆಯನ್ನು ನೆರವೇರಿಸಲಾಗುತ್ತಿದೆ. ಇಲ್ಲಿನ ವಿಶೇಷ ಎಂದರೆ, ಮಹಿಳೆಯರಿಂದಲೇ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ರಥೋತ್ಸವ ನಡೆಯುತ್ತದೆ. ಮಹಿಳೆಯರು ಜಾತ್ರೆಯಲ್ಲಿ ಭಾಗವಹಿಸಿ ಧನ್ಯರಾಗಬೇಕು ಎಂದು ಹೇಳಿದರು.
ಶ್ರೀ ಅನ್ನಪೂರ್ಣೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ. ಸಂಶಿಮಠ, ಅಧ್ಯಕ್ಷ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ ಮುಂತಾದ ಗಣ್ಯರು ವೇದಿಕೆಯಲ್ಲಿದ್ದರು.
ಶ್ರೀ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಡಾ. ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಪುರಾಣ ಪ್ರವಚನ ನಡೆಯಿತು. ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿ ಮಠ ಪುರಾಣ ಪಠಿಸಿದರು. ಪಕ್ರುಸಾಬ ಮುಲ್ಲಾ, ಜಗನ್ನಾಥ ಕಲಬುರಗಿ, ಶರಣಕುಮಾರ ಗುತ್ತರಗಿ, ಎಸ್.ಬಿ. ಭಜಂತ್ರಿ ಸಂಗೀತ ಸೇವೆ ನೀಡಿದರು.
ಪೂಜಾ ಸಮಿತಿ ಅಧ್ಯಕ್ಷರಾದ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವಿಧ ಭಕ್ತಿಸೇವೆ ವಹಿಸಿದ್ದ ನಿರಂಜನ ಮಲ್ಲಾಪೂರ, ಜಿ.ಎಂ. ಯಾನಮಶೆಟ್ಟಿ, ಆನಂದ ಬಸ್ತಿ, ನೀಲಮ್ಮ ವೀರಯ್ಯ ವಿಭೂತಿಮಠ ಅವರಿಗೆ ಗುರುರಕ್ಷೆ ನೀಡಲಾಯಿತು. ಮಂಗಲಾ ಬಿ. ಯಾನಮಶೆಟ್ಟಿ ಸ್ವಾಗತಿಸಿದರು. ಪ್ರಕಾಶ ಬಂಡಿ ಕಾರ್ಯಕ್ರಮ ನಿರೂಪಿಸಿದರು. ಸುರೇಖಾ ಎಸ್. ಪಿಳ್ಳಿ ವಂದಿಸಿದರು.
ಸಮ್ಮುಖ ವಹಿಸಿದ್ದ ಶ್ರೀಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಶ್ರೀದೇವಿಯ ಪೂಜೆ, ಆರಾಧನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಡಾ. ಸುನೀತಾ ಶ್ರೀಧರ ಕುರಡಗಿ, ಗದಗ ಜಿಲ್ಲಾ ಸಂಸ್ಕಾರ ಭಾರತಿ ಅಧ್ಯಕ್ಷ ಪಿ.ಎ. ಕುಲಕರ್ಣಿ, ಪರಿಮಳಾ ಕುಲಕರ್ಣಿ ಪಾಲ್ಗೊಂಡಿದ್ದರು.