ಬೆಂಗಳೂರು: ಶತಮಾನಕ್ಕೂ ಮೀರಿದ ಭವ್ಯ ಪರಂಪರೆ ಹೊಂದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ–ಕೆಎಸ್ಡಿಎಲ್ ಸಂಸ್ಥೆ ತನ್ನ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಕಾಲ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಮಂಗಳವಾರದಿಂದ ಅವರ ಜಾಹೀರಾತು ಮತ್ತು ಪ್ರಚಾರ ಚಟುವಟಿಕೆಗಳು ಅಧಿಕೃತವಾಗಿ ಆರಂಭವಾಗಲಿವೆ.
ಈ ಹಿನ್ನೆಲೆಯಲ್ಲಿ ಮೈಸೂರು ಸ್ಯಾಂಡಲ್ ಸೋಪನ್ನು ನವ ವಿನ್ಯಾಸದೊಂದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಶವರ್ ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್ ಸೇರಿದಂತೆ ಸಂಸ್ಥೆಯ 57 ಉತ್ಕೃಷ್ಟ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಅಪಾರ ಬೇಡಿಕೆ ಇದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಪ್ರಚಾರ ರಾಯಭಾರಿಯಾಗಿರುವ ಅವಧಿಯಲ್ಲಿ ತಮನ್ನಾ ಭಾಟಿಯಾ ಅವರು ಇದೇ ರೀತಿಯ ಖಾಸಗಿ ಕಂಪನಿಗಳ ಉತ್ಪನ್ನಗಳಿಗೆ ರೂಪದರ್ಶಿಯಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ವಿಜಯಪುರ ಮತ್ತು ಡಾಬಸ್ಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ಉತ್ಪಾದನಾ ಘಟಕಗಳನ್ನು ಆರಂಭಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ರಫ್ತು ವಹಿವಾಟನ್ನು 25–30 ಕೋಟಿ ರೂಪಾಯಿಯಿಂದ ದ್ವಿಗುಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ.
ಇನ್ನು, ಕೆಎಸ್ಡಿಎಲ್ ಸಂಸ್ಥೆಯ ಅಧ್ಯಕ್ಷ ಸಿ.ಎಸ್. ಅಪ್ಪಾಜಿ ನಾಡಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ಅವರು, ದೆಹಲಿ ಮತ್ತು ಮಧ್ಯ ಭಾರತದ ಮಾರುಕಟ್ಟೆ ವಿಸ್ತರಣೆಯೊಂದಿಗೆ 2025–26ರ ವೇಳೆಗೆ ಸಂಸ್ಥೆಯ ವಹಿವಾಟು 2,000 ಕೋಟಿ ರೂ. ತಲುಪುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.



