ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರು ಕೆರೆಗಳ ಹೂಳೆತ್ತುವ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವದು ಮಾದರಿ ಯೋಜನೆಯಾಗಿದ್ದು, ಈ ಯೋಜನೆಯಿಂದ ರೈತರ ಹಾಗೂ ಅಂತರ್ಜಲ ವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಬಸಾಪೂರ ಗ್ರಾಮದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ‘ನಮ್ಮೂರು, ನಮ್ಮ ಕೆರೆ’ ಕಾರ್ಯಕ್ರಮದಡಿಯಲ್ಲಿ ಬಸಾಪೂರ ಗ್ರಾಮದ ಪುರಾತನ ಕೆರೆಯ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕೆರೆ ಹೂಳೆತ್ತುವದರಿಂದ ಮಳೆಗಾಲದಲ್ಲಿ ನೀರು ಹೆಚ್ಚು ಸಂಗ್ರಹವಾಗುವ ಕಾರಣ ಅಂತರ್ಜಲ ಮಟ್ಟ ವೃದ್ಧಿಯಾಗಿ, ಕೆರೆ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಲಿದೆ. ಈ ನಿಟ್ಟಿನಲ್ಲಿ ಸರಕಾರ ಮಾಡಲಾರದ ಸಮಾಜಮುಖಿ ಕಾರ್ಯಕ್ರಮಗಳನ್ನು ಧರ್ಮಾಧಿಕಾರಿಗಳು ಕೈಗೊಳ್ಳುತ್ತಿರುವದು ಶ್ಲಾಘನೀಯ. ಅದಕ್ಕಾಗಿ ಎಲ್ಲರೂ ಕೆರೆ-ಕಟ್ಟೆಗಳನ್ನು ರಕ್ಷಿಸುವದಕ್ಕೆ ಮುಂದಾಗಬೇಕು ಎಂದರು.
ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೀಶ ಎಂ. ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ದೇಶವೇ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸುವದಾಗಿದ್ದು, ಸಂಸ್ಥೆಯ ವತಿಯಿಂದ ಈಗಾಗಲೇ ನೂರಾರು ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ರಾಮಗೇರಿ ಗ್ರಾ.ಪಂ ಅಧ್ಯಕ್ಷೆ ಅಡಿವೆಕ್ಕ ನಿಂಗಪ್ಪ ಬೆಟಗೇರಿ, ಉಪಾಧ್ಯಕ್ಷೆ ಈರಮ್ಮ ಮಡಿವಾಳರ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ ಜಾವೂರ, ಅಶೋಕ ತುಂಬಣ್ಣವರ, ಕಮಲವ್ವ ತುಂಬಣ್ಣವರ, ಅಣ್ಣಪ್ಪ ವಾಲ್ಮೀಕಿ, ಅನ್ನಪೂರ್ಣ ಪೂಜಾರ ಸೇರಿದಂತೆ ಅನೇಕರಿದ್ದರು.