ವಿಜಯಸಾಕ್ಷಿ ಸುದ್ದಿ, ಗದಗ : ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗ ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಸರ್ಕಾರದ ರೈಲ್ವೇ ಹಾಗೂ ರಾಷ್ಟ್ರೀಯ ಹೆದ್ದಾರಿಗಳಿಗೆ ರಾಜ್ಯ ಸರ್ಕಾರವು ಭೂಮಿಯನ್ನು ಒದಗಿಸಿಕೊಡಬೇಕು. ಹಾಗಾಗಿ ಯಾವುದೇ ರಾಷ್ಟ್ರೀಯ ಹೆದ್ದಾರಿ ಡಿಪಿಆರ್ ಅಂತಿಮಗೊಳ್ಳವ ಮೊದಲು ಸಂಬಂಧಿಸಿದ ಅಭಿಯಂತರರು ಸ್ಥಳೀಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಅವರಿಗೆ ನಿರಂತರವಾಗಿ ವರದಿ ಸಲ್ಲಿಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಆದಷ್ಟು ಕೃಷಿ ಮಾಡದ ಅಥವಾ ಖರಾಬು ಭೂಮಿಯನ್ನು ಗುರುತಿಸಿ, ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವರದಿ ತಯಾರಿಸಬೇಕು ಎಂದು ಸೂಚಿಸಿದರು.
ಹೆದ್ದಾರಿಗಳಿಗೆ ಮಂಜೂರಾದ ಅನುದಾನವು ಇಲಾಖೆಗಳ ನಡುವಿನ ಅಸಹಕಾರದಿಂದ ಮರಳಿ ಹೋದರೆ ಈ ಪ್ರದೇಶದ ಅಭಿವೃದ್ಧಿಗೆ ಮಾರಕ ಆಗುತ್ತದೆ. ಹಾಗಾಗಿ ಎಲ್ಲರ ನಡುವೆ ಸಹಕಾರ ಅತ್ಯವಶ್ಯಕ. ಯಾವುದೇ ಕಾರಣಗಳಿಗೆ ಆಸ್ಪದ ನೀಡದೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರ-ಸಮನ್ವಯದಿಂದ ಅಭಿವೃದ್ಧಿ ಕೆಲಸಗಳತ್ತ ಕಾರ್ಯೋನ್ಮುಖವಾಗಬೇಕು ಎಂದರು.
ಸಂಸದರಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು, ಎಲ್ಲಾ ವಿಷಯಗಳ ಬಗ್ಗೆ ಗಂಭೀರವಾಗಿದ್ದೇನೆ. ಹಾಗೇ ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಗಂಭೀರವಾಗಿ ಕೆಲಸ ನಿರ್ವಹಿಸಿ ಎಂದು ಹೇಳಿದರು.
ರಸ್ತೆಗಳು ಸುಸ್ಥಿತಿಯಿಂದ ಇರಲು ನದಿ ಭಾಗದಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗಳಿಗೆ ತಡೆ ಬೀಳಬೇಕು. ಇಲ್ಲದಿದ್ದರೆ ಓವರ್ ಲೋಡ್ ವಾಹನಗಳ ಸಾಗಾಟದಿಂದ ರಸ್ತೆಗಳು ಹದೆಗೆಡುತ್ತವೆ. ನಿಯಮ ಬಾಹಿರವಾಗಿ ಅಕ್ರಮವಾಗಿ ಗಣಿಗಾರಿಕೆ ನಡೆಯದಂತೆ ಕ್ರಮವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಯಿ ಅವರು ಅಧಿಕಾರಿಗಳಿಗೆ ಹೇಳಿದರು.
ಗದಗ ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದ್ದು, ಅದರಿಂದ ನೂರಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಹಾಗಾಗಿ ವಿದ್ಯಾಲಯಕ್ಕೆ ನಿಯೋಜಿಸಿದ ಜಾಗದ ಕುರಿತು ಚರ್ಚಿಸಿದರು.
ಸಭೆಯಲ್ಲಿ ಜಿಲ್ಲೆಯ ಪ್ರಮುಖ ರಸ್ತೆ, ಬೈಪಾಸ್ ನಿರ್ಮಾಣ ಕಾಮಗಾರಿ ಅನುಷ್ಠಾನಕ್ಕೆ ಇರುವ ತಾಂತ್ರಿಕ ಸಮಸ್ಯೆಗಳ ಪರಿಹಾರ ಕುರಿತು ವಿಸ್ತ್ರತವಾಗಿ ಚರ್ಚಿಸಿ, ಪರಿಹಾರ ಕಂಡುಕೊಳ್ಳಲಾಯಿತು. ಸಭೆಯಲ್ಲಿ ಜಿ.ಪಂ ಸಿಇಓ ಭರತ್ ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕೇಂದ್ರೀಯ ವಿದ್ಯಾಲಯಕ್ಕೆ ಬೇಕಾದ ಜಾಗವನ್ನು ಈಗಾಗಲೇ ಕಾಯ್ದಿರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷಕ್ಕೆ ಕೇಂದ್ರೀಯ ವಿದ್ಯಾಲಯವನ್ನು ಪ್ರಾರಂಭಿಸಲು ತಾತ್ಕಾಲಿಕ ಕಟ್ಟಡವನ್ನು ಗುರುತಿಸಿ ಕ್ರಮ ತೆಗೆದುಕೊಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.