ಬೆಂಗಳೂರು: ನಗರದಲ್ಲಿ ಫುಡ್ ಡೆಲಿವರಿ ಬಾಯ್ಗಳ ಮೊಬೈಲ್ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ನೇಪಾಳಿ ಮೂಲದ ನಾಲ್ವರು ಆರೋಪಿಗಳನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಮೊಬೈಲ್ ಫೋನ್ಗಳು ಹಾಗೂ 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ದರೋಡೆಗೊಳಗಾದ ಸುರೇಶ್ (22) ಎಂಬವರು ನೀಡಿದ ದೂರಿನ ಮೇರೆಗೆ, ಪೊಲೀಸರು ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20), ಸಮೀರ್ ಲೋಹಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಫುಡ್ ಡೆಲಿವರಿಗೆಂದು ತೆರಳುವವರನ್ನು ಅಡ್ಡಗಟ್ಟಿ ಮೊಬೈಲ್ ಮತ್ತು ಹಣವನ್ನು ಪೀಕುತ್ತಿದ್ದ ಗ್ಯಾಂಗ್, ಕಳೆದ ತಿಂಗಳು ಸೆ.13ರ ರಾತ್ರಿ ಕಸವನಹಳ್ಳಿ ರಸ್ತೆಯಲ್ಲಿಯೂ ಕೈಚಳಕ ತೋರಿಸಿತ್ತು. ಫುಡ್ ಡೆಲಿವರಿ ಬಾಯ್ ಸುರೇಶ್ ಎಂಬಾತನಿಗೆ ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿತ್ತು.
ಮೂರು ಬೈಕ್ ಗಳಲ್ಲಿ ಬಂದಿದ್ದ ಆರೋಪಿಗಳು ಕೃತ್ಯ ಎಸಗಿದ್ದರು. ಸುರೇಶ್ ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಮೊಬೈಲ್ ಗಳು ಮತ್ತು ಮೂರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ. ಬೆಳ್ಳಂದೂರು ಮಾತ್ರವಲ್ಲದೆ, ಹೆಬ್ಬಗೋಡಿ, ಪರಪ್ಪನ ಅಗ್ರಹಾರ, ಬಂಡೆಪಾಳ್ಯ, HSR ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಈ ಗ್ಯಾಂಗ್ ಕೃತ್ಯವೆಸಗಿರೋದು ಬೆಳಕಿಗೆ ಬಂದಿದೆ.