HomeKarnataka Newsವೆನ್ನಿಲಾ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ತಾಯಿ ಪ್ರಿಯಾಂಕಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ಪೊಲೀಸರ ಸಿದ್ಧತೆ

ವೆನ್ನಿಲಾ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ತಾಯಿ ಪ್ರಿಯಾಂಕಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ಪೊಲೀಸರ ಸಿದ್ಧತೆ

For Dai;y Updates Join Our whatsapp Group

ಬೆಂಗಳೂರು: ಕಾಡುಗೋಡಿ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಪ್ರಕರಣದ ಸತ್ಯಾಂಶ ಹೊರತರುವ ನಿಟ್ಟಿನಲ್ಲಿ ವೈಜ್ಞಾನಿಕ ತನಿಖೆಗೆ ಮುಂದಾಗಿದ್ದಾರೆ. ಪ್ರಕರಣದಲ್ಲಿ ಸಹ ಆರೋಪಿ ಆಗಿರುವ ಬಾಲಕಿಯ ತಾಯಿ ಪ್ರಿಯಾಂಕಾ ವಿರುದ್ಧ ಅನುಮಾನಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಆಕೆಗೆ ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಮೋಹನ್ ಮತ್ತು ಪ್ರಿಯಾಂಕಾರನ್ನು ಬಾಣಸವಾಡಿ ಎಸಿಪಿ ಅನುಷಾ ನೇತೃತ್ವದ ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಹೆಚ್ಚಿನ ವಿಚಾರಣೆ ಹಾಗೂ ಸಾಕ್ಷ್ಯ ಸಂಗ್ರಹಕ್ಕಾಗಿ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದರು.

ಪೊಲೀಸರ ಮನವಿಯನ್ನು ಪರಿಗಣಿಸಿದ ಒಂದನೇ ಎಸಿಜೆಎಂ ನ್ಯಾಯಾಲಯ, ಆರೋಪಿ ಮೋಹನ್‌ಗೆ 5 ದಿನ ಹಾಗೂ ಪ್ರಿಯಾಂಕಾಗೆ 10 ದಿನಗಳ ಪೊಲೀಸ್ ಕಸ್ಟಡಿಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಅವಧಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ.

ಇದುವರೆಗೆ ನಡೆದ ವಿಚಾರಣೆಯಲ್ಲಿ ಆರೋಪಿ ಮೋಹನ್ ಕೊಲೆ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಾರ್ಚ್ 24ರಂದು ಇಂದಿರಾನಗರದಲ್ಲಿ ಶಾಪಿಂಗ್‌ಗೆ ತೆರಳಿದ್ದ ವೇಳೆ ಐಸ್‌ಕ್ರೀಂ ವಿಚಾರಕ್ಕೆ ಬಾಲಕಿ ಅಳುತ್ತಿದ್ದ ಹಿನ್ನೆಲೆಯಲ್ಲಿ ಕೋಪಗೊಂಡು ಆಕೆಯ ಹೊಟ್ಟೆಗೆ ಒದ್ದು, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಆದರೆ ಸಹ ಆರೋಪಿ ಪ್ರಿಯಾಂಕಾ ಮಾತ್ರ ಪ್ರಕರಣದಲ್ಲಿ ತನ್ನ ಪಾತ್ರವನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ಮಗಳ ಕೊಲೆ ಕುರಿತು ತನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾಳೆ. ತನ್ನ ವಿರುದ್ಧದ ಆರೋಪಗಳು ಸುಳ್ಳು ಎಂದು ಆಕೆ ತನಿಖಾಧಿಕಾರಿಗಳ ಮುಂದೆ ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ.

ಪ್ರಿಯಾಂಕಾ ನೀಡಿರುವ ಹೇಳಿಕೆಗಳು ಹಾಗೂ ಪ್ರಕರಣದ ಇತರೆ ಸಾಕ್ಷ್ಯಗಳ ನಡುವೆ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಪಾಲಿಗ್ರಾಫ್ ಪರೀಕ್ಷೆಯ ಮೊರೆ ಹೋಗಿದ್ದಾರೆ. ಪರೀಕ್ಷೆಗೆ ಪ್ರಿಯಾಂಕಾ ಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದ್ದು, ಇದಕ್ಕಾಗಿ ಅಗತ್ಯ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ.

ವೆನ್ನಿಲಾ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದು, ಪ್ರಕರಣದ ನಿಖರ ಸತ್ಯಾಂಶವನ್ನು ಹೊರತರುವ ನಿಟ್ಟಿನಲ್ಲಿ ಪೊಲೀಸರು ಬಹುಮುಖ ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img