ಬೆಂಗಳೂರು: ಸ್ವಾರ್ಥಕ್ಕಾಗಿ ತಾರತುರಿಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ಮುಂದೂಡುವಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಪರೀಕ್ಷೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಪರೀಕ್ಷೆ ಬರೆಯುವ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆ ಕೊಡುವ ಹುನ್ನಾರ ಇದರಲ್ಲಿದೆ. ಪೂರ್ವಭಾವಿ ಪರೀಕ್ಷೆ ನಿಗದಿ ಮಾಡಿರುವುದು ಸರಿಯಷ್ಟೆ. ಕೆ
ಲವರ ಸ್ವಾರ್ಥಕ್ಕಾಗಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವ ಆರೋಪವಿದ್ದು, ಪರೀಕ್ಷೆ ಬರೆಯಲು ಅನೇಕ ದಿನಗಳಿಂದ ಪ್ರಾಮಾಣಿಕವಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ, ಅದರಲ್ಲಿಯೂ ವಿಕಲಚೇತನ ಅಭ್ಯರ್ಥಿಗಳಿಗೆ ತೊಂದರೆ ಕೊಡುವ ಹುನ್ನಾರ ಇದರಲ್ಲಿದೆ ಎಂದು ಆರೋಪಿಸಿದ್ದಾರೆ. ರಜೆ ದಿನ ಹೊರತುಪಡಿಸಿ ಇತರೆ ದಿನಗಳಲ್ಲಿ ಪರೀಕ್ಷೆ ನಡೆಸಿದರೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೂ ಸಮಸ್ಯೆ ಆಗುತ್ತದೆ.
ಈ ಬಗ್ಗೆ ಅಭ್ಯರ್ಥಿಗಳು ಹಲವು ದಿನಗಳಿಂದ ಪರೀಕ್ಷೆ ಮುಂದೂಡುವಂತೆ ಮನವಿ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ KPSC ಪರೀಕ್ಷೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿರುವುದು ಅನುಮಾನಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರವು ಅವರ ಕಾಳಜಿಯನ್ನು ನಿರ್ಲಕ್ಷಿಸಿದೆ ಮತ್ತು ಅವರ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಹೊರಟಿರುವುದು ಅಕ್ಷಮ್ಯ ಎಂದು ಆಕ್ರೋಶ ಹೊರಹಾಕಿದ್ದಾರೆ.