ಬೆಂಗಳೂರು: ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದು, ಕುರುಬ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮನವಿಗಳು ಬಂದಿದ್ದರಿಂದ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಮಂಜೂರಾಗಿದೆ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಂದ ಬಂದಿರುವ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘ-ಸಂಸ್ಥೆಗಳಿಗೆ ₹71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಪೂರ್ವಭಾವಿ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ.
ಇದು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಇತರೆ ಹಿಂದುಳಿದ ಜಾತಿಗಳಿಂದ ಸಲ್ಲಿಕೆಯಾಗಿರುವ ಮನವಿಗಳನ್ನೂ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕುರುಬ ಸಮುದಾಯದ ಜೊತೆಗೆ ಮಡಿವಾಳ, ಲಿಂಗಾಯತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ ಹಾಗೂ ರೆಡ್ಡಿ ಸೇರಿದಂತೆ ವಿವಿಧ ಸಮುದಾಯಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೂ ಪೂರ್ವಭಾವಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಈ ಆದೇಶವು ಅನುದಾನ ಬಿಡುಗಡೆಗೆ ಸಂಬಂಧಿಸಿದ ಅಂತಿಮ ಆದೇಶವಲ್ಲ ಎಂದು ವಿವರಿಸಿರುವ ಅವರು, ಅನುದಾನ ಪಡೆಯಲು ಸಂಬಂಧಿತ ಸಂಘ-ಸಂಸ್ಥೆಗಳು ಜಿಲ್ಲಾಧಿಕಾರಿಗಳ ಮೂಲಕ ಜಮೀನು ಅಥವಾ ನಿವೇಶನದ ದಾಖಲೆಗಳು, ಸ್ಥಳೀಯ ಸಂಸ್ಥೆಗಳ ಕಟ್ಟಡ ಪರವಾನಗಿ, ಮೂರು ವರ್ಷದ ಆಡಿಟ್ ವರದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳ ಪ್ರಕಾರ ಕಾಮಗಾರಿಯ ಪ್ರಗತಿಯನ್ನು ಮೂರು ಹಂತಗಳಲ್ಲಿ ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಲಾಗುವುದು. ಪ್ರತಿವರ್ಷ ಕಾಮಗಾರಿಯ ಪ್ರಗತಿ ಪರಿಶೀಲನೆಯ ಆಧಾರದ ಮೇಲೆ ಮಂಜೂರಾದ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದು ನಿರಂತರ ಪ್ರಕ್ರಿಯೆಯಾಗಿದ್ದು, ಸರ್ಕಾರದ ಆದೇಶದಂತೆ ಪ್ರವರ್ಗ-1 ಮತ್ತು ಪ್ರವರ್ಗ-2ಎಗೆ ಸೇರಿದ ಜಾತಿಗಳಿಗೆ ಶೇ.70ರಷ್ಟು ಹಾಗೂ ಪ್ರವರ್ಗ-3ಎ ಮತ್ತು 3ಬಿಗೆ ಸೇರಿದ ಜಾತಿಗಳಿಗೆ ಶೇ.30ರಷ್ಟು ಅನುದಾನ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರವರ್ಗ-1 ಮತ್ತು 2ಎ ಅಡಿಯಲ್ಲಿ ಹೆಚ್ಚಿನ ಸಂಖ್ಯೆಯ ಜಾತಿಗಳು ಇರುವುದರಿಂದ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಮಂಜೂರಾಗಿರುವಂತೆ ಕಂಡುಬಂದಿದೆ ಹೊರತು ಇದರಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.



