ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮಾಜದಲ್ಲಿ ಉತ್ತಮ ಶಿಕ್ಷಣ ಪಡೆಯುವದು ಎಲ್ಲರ ಹಕ್ಕಾಗಿದೆ. ಶಿಕ್ಷಣ ಎನ್ನುವದು ಜಗತ್ತಿನ ಅತಿದೊಡ್ಡ ಶಕ್ತಿ. ಇದರಿಂದ ಯಾರೂ ವಂಚಿತರಾಗಬಾರದು. ವಿದ್ಯೆಗೆ ಬಡವ-ಬಲ್ಲಿದ, ಎಂಬ ಬೇಧವಿಲ್ಲ. ಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಶ್ರೇಷ್ಠ ನಾಗರಿಕರಾಗಬೇಕು ಎಂದು ಬೆಂಗಳೂರಿನ ಉದ್ಯಮಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರ ಹಳೆಯ ವಿದ್ಯಾರ್ಥಿ ರಾಜಕುಮಾರ ಅಗಡಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದಲ್ಲಿ ಸುಮಾರು 60-65 ವರ್ಷಗಳ ಹಿಂದೆ ತಾವು ಪ್ರಾಥಮಿಕ ಶಿಕ್ಷಣ ಪಡೆದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಶಾಲೆಯನ್ನು ಸಂಪೂರ್ಣವಾಗಿ ವೀಕ್ಷಿಸಿ ನಂತರ ಶಾಲೆಯ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ತಾವು ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಸೌಲಭ್ಯಗಳ ಕೊರತೆ, ಮನೆಯಲ್ಲಿ ಆರ್ಥಿಕ ಸಮಸ್ಯೆ, ಶೈಕ್ಷಣಿಕ ಸಮಸ್ಯೆ ಇತ್ಯಾದಿಗಳಿಂದ ಅನೇಕರು ಶಿಕ್ಷಣ ವಂಚಿತರಾಗುತ್ತಿದ್ದರು. ಆದರೆ ಇದೀಗ ಸೌಲಭ್ಯಗಳು ಸಾಕಷ್ಟು ದೊರೆಯುತ್ತಿದ್ದು ಅದರಂತೆ ಮಕ್ಕಳು ವಿದ್ಯಾಭ್ಯಾಸ ಮಾಡುವದಕ್ಕೆ ಆದ್ಯತೆ ನೀಡುವದು ಅವಶ್ಯವಾಗಿದೆ. ಪ್ರಾಥಮಿಕ ಶಾಲೆ ನಂ.1 ಈಗ ಸಾಕಷ್ಟು ಬದಲಾವಣೆಯಾಗಿದೆ, ವಿದ್ಯೆ ನೀಡಿದ ಗುರುವನ್ನು, ಕಲಿತ ಶಾಲೆಯನ್ನು ಎಂದಿಗೂ ಮರೆಯಬಾರದು ಎನ್ನುವ ನಿಟ್ಟಿನಲ್ಲಿ ಈ ಶಾಲೆಗೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಶಾಲೆಗೆ ಅವಶ್ಯವಿರುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ. ನಾನು ಕಲಿತ ಶಾಲೆಯಲ್ಲಿಯೇ ನನಗೆ ಗೌರವ ದೊರೆತಿರುವದು ಹೆಮ್ಮೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜಕುಮಾರ ಅವರ ಸಹೋದರಿ ಹಾಗೂ ಹಳೆಯ ವಿದ್ಯಾರ್ಥಿನಿ ಶುಭಾವತಿ, ಅವರ ಧರ್ಮಪತ್ನಿ, ಶೋಭಾ ಅಗಡಿ, ಕವಿತಾ ಮಂದನಾ, ಎಸ್ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಶಿರಬಡಗಿ, ಎಂ.ಆರ್. ಪಾಟೀಲ, ದಿಗಂಬರ ಪೂಜಾರ, ಗಿರೀಶ ಅಗಡಿ, ಮುಖ್ಯೋಪಾಧ್ಯಾಯ ಡಿ.ಎನ್. ದೊಡ್ಡಮನಿ, ಶಿಕ್ಷಕರಾದ ಎಸ್ತೇರ್ ಪೀಟರ್, ರಾಜೇಶ್ವರಿ ಅಡರಕಟ್ಟಿ, ಸವಿತಾ ಬೋಮಲೆ, ಅಕ್ಷತಾ ಕಾಟೇಗಾರ, ಆಯೇಷಾ ನದಾಫ್, ಎಸ್.ಎಸ್. ಮಹಾಲಿಂಗಶೆಟ್ಟರ ಮುಂತಾದವರಿದ್ದರು.
ಶಂಕರ ಬ್ಯಾಡಗಿ ಮಾತನಾಡಿ, 1872ರಲ್ಲಿ ಪ್ರಾರಂಭವಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1 ಹಲವಾರು ಮಹನೀಯರ, ದಾನಿಗಳ ಸಹಕಾರದಿಂದ ಅನೇಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ಸುಮಾರು 6 ದಶಕಗಳ ಹಿಂದೆ ಕಲಿತ ಶಾಲೆಯ ಬಗ್ಗೆ ಅಭಿಮಾನದಿಂದ ಆಗಮಿಸಿದ ರಾಜಕುಮಾರ ಅಗಡಿ ಅಂತವರ ಸಹಕಾರ ಈ ಶಾಲೆಗೆ ದೊರಕಲಿ ಎಂದು ಹೇಳಿದರು.



