HomePolitics Newsಡಿಕೆ ಶಿವಕುಮಾರ್ ಅವರನ್ನು ಯಾರೂ ಜೈಲಿಗೆ ಕಳುಹಿಸುವುದಿಲ್ಲ: ಸಿಎಂ ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು

ಡಿಕೆ ಶಿವಕುಮಾರ್ ಅವರನ್ನು ಯಾರೂ ಜೈಲಿಗೆ ಕಳುಹಿಸುವುದಿಲ್ಲ: ಸಿಎಂ ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು

For Dai;y Updates Join Our whatsapp Group

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ವಿವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ “ಜೈಲು ನನಗೆ ಹೊಸದೇನಲ್ಲ” ಎಂಬ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಯಾರೂ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ. ಆದರೆ ಅವರು ತಪ್ಪು ಮಾಡಿದ್ದು ಸಾಬೀತಾದರೆ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಜೋಶಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾರೇ ತಪ್ಪು ಮಾಡಿದರೂ ಜೈಲಿಗೆ ಹೋಗುತ್ತಾರೆ. ಇದರ ಅರ್ಥ ನಾವು ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎನ್ನುವುದಲ್ಲ. ಜೈಲಿನ ಬಗ್ಗೆ ಈಗಲೇ ಯಾಕೆ ಮಾತನಾಡುತ್ತಿದ್ದಾರೆ? ಏನಾದರೂ ತಪ್ಪು ಮಾಡಿದ್ದೀರಾ? ಇದು ಜನರ ಅನುಕಂಪ ಪಡೆಯುವ ಪ್ರಯತ್ನ” ಎಂದು ಆರೋಪಿಸಿದರು.

ಮುಖ್ಯಮಂತ್ರಿ ಎಂದರೆ ಸರ್ವಾಧಿಕಾರಿಯಲ್ಲ ಅಥವಾ ರಾಜ್ಯದ ಮಹಾರಾಜರಲ್ಲ. ಆ ಸ್ಥಾನಕ್ಕೆ ತಕ್ಕ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದ ಜೋಶಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರದ ಆರೋಪಗಳಿಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಬಿಡದಿಯಲ್ಲಿ ರೈತರ ಭೂಮಿ ಸ್ವಾಧೀನಪಡಿಸಿಕೊಂಡು ಟೌನ್‌ಶಿಪ್ ನಿರ್ಮಿಸುವ ವಿಚಾರವಾಗಿ ಮಾತನಾಡಿದ ಜೋಶಿ, ರೈತರ ಒಪ್ಪಿಗೆ ಇಲ್ಲದೆ ಯೋಜನೆ ಜಾರಿಗೊಳಿಸುವುದು ಸರಿಯಲ್ಲ ಎಂದರು.

“ಬಲವಂತವಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಬದಲು ರೈತರ ಮನವೊಲಿಸಬೇಕಿತ್ತು. ರೈತರು ಪ್ರತಿಭಟನೆ ಆರಂಭಿಸಿದ ನಂತರ ಒತ್ತಾಯ ಮಾಡಿಲ್ಲ ಎಂದು ಹೇಳುವುದರಿಂದ ಪ್ರಯೋಜನವಿಲ್ಲ. ಮೊದಲಿನಿಂದಲೇ ರೈತರೊಂದಿಗೆ ಸಂವಾದ ನಡೆಸದಿರುವುದು ಏಕೆ?” ಎಂದು ಪ್ರಶ್ನಿಸಿದರು.

ಮೂರು ವರ್ಷಗಳ ಕಾಲ ಈ ಯೋಜನೆಗೆ ಆಸಕ್ತಿ ತೋರದ ಸರ್ಕಾರ ಈಗ ಏಕಾಏಕಿ ಮುಂದಾಗಿರುವುದರ ಹಿಂದಿನ ಕಾರಣವೇನು? ಇದರಲ್ಲಿ ಯಾವುದಾದರೂ ‘ಡೀಲ್’ ನಡೆದಿದೆಯೇ ಎಂಬ ಅನುಮಾನಗಳಿಗೆ ಸರ್ಕಾರ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮಾಡಿರುವ ಆರೋಪಗಳಿಗೆ ಉತ್ತರ ನೀಡುವ ಬದಲು ಡಿ.ಕೆ. ಶಿವಕುಮಾರ್ ಅವರ ಮೇಲೆಯೇ ಕಿಡಿಕಾರುತ್ತಿದ್ದಾರೆ ಎಂದು ಜೋಶಿ ಟೀಕಿಸಿದರು. “ಒಬ್ಬ ವ್ಯಕ್ತಿ ತಪ್ಪು ಮಾಡಿ ಅದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗದಾಗ ಈ ರೀತಿಯ ಪ್ರತಿಕ್ರಿಯೆ ನೀಡುತ್ತಾನೆ” ಎಂದು ಅವರು ಹೇಳಿದರು.

ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ 25 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ವಿಚಾರವನ್ನೂ ಪ್ರಸ್ತಾಪಿಸಿದ ಜೋಶಿ, ದೇಶದ ವಿಪಕ್ಷ ನಾಯಕ ಎಲ್ಲಿದ್ದಾರೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

“ನಾವು ವಿದೇಶಕ್ಕೆ ಹೋದರೆ ಅದರ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡುತ್ತೇವೆ. ನಾನು ದಾವೋಸ್‌ಗೆ ಹೋಗಿದ್ದೆ, ಕಿರಣ್ ರಿಜಿಜು ಕತಾರ್‌ಗೆ ಹೋಗಿದ್ದರು. ಆದರೆ ರಾಹುಲ್ ಗಾಂಧಿ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದನ್ನು ಕಾಂಗ್ರೆಸ್ ಯಾಕೆ ಹೇಳುತ್ತಿಲ್ಲ?” ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಬರ ಅಧ್ಯಯನಕ್ಕಾಗಿ ಕೇಂದ್ರಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ, ಮೊದಲು ಬರಪೀಡಿತ ಪ್ರದೇಶಗಳ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

“ಕಾಂಗ್ರೆಸ್‌ನ ಧೋರಣೆ ಏನೆಂದರೆ ಮಳೆ ಹೆಚ್ಚಾದರೂ ಮೋದಿ ಕಾರಣ, ಮಳೆ ಕಡಿಮೆಯಾದರೂ ಮೋದಿ ಕಾರಣ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರವನ್ನೇ ದೂರುವುದು ಸರಿಯಲ್ಲ. ಈ ರೀತಿಯ ರಾಜಕೀಯವನ್ನು ಕಾಂಗ್ರೆಸ್ ಬಿಡಬೇಕು” ಎಂದು ವಾಗ್ದಾಳಿ ನಡೆಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img