ಹಾಸನ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸಾವಿರ ದಿನಗಳ ಸಂಭ್ರಮಾಚರಣೆಗೆ ಸಿದ್ಧವಾಗಿರುವ ಸಂದರ್ಭದಲ್ಲಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ದರೋಡೆ, ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸಿದರು. ಸಾವಿರ ದಿನಗಳ ಸಾಧನೆ ಎನ್ನುವುದಕ್ಕಿಂತ ಸಮಸ್ಯೆಗಳೇ ಹೆಚ್ಚಾಗಿವೆ ಎಂದು ಟೀಕಿಸಿದರು.ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಪ್ರಶ್ನೆ ಎತ್ತಿದ ಅವರು,
ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ ರೂ.2,000 ನೀಡುವುದಾಗಿ ಹೇಳಿದ್ದರೂ, ಅದು ಸಕಾಲದಲ್ಲಿ ಲಾಭಾರ್ಥಿಗಳಿಗೆ ತಲುಪಿಲ್ಲ ಎಂದು ಆರೋಪಿಸಿದರು. 2025ರ ಜನವರಿ ಹಾಗೂ ಫೆಬ್ರವರಿ ತಿಂಗಳ ಹಣ ಬಿಡುಗಡೆ ಆಗಿಲ್ಲ ಎಂದು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡಲಾಗಿಲ್ಲ ಎಂದು ಹೇಳಿದರು.
ಸಚಿವರು ಸದನದಲ್ಲಿ ಕಣ್ತಪ್ಪಿನಿಂದಾಗಿದೆ ಅಥವಾ ಹಣಕಾಸು ಇಲಾಖೆ ಬಿಡುಗಡೆ ಮಾಡಿಲ್ಲ ಎಂದು ಹೇಳಿರುವುದನ್ನು ಉಲ್ಲೇಖಿಸಿ, ಇದನ್ನು ಜವಾಬ್ದಾರಿಯುತ ಉತ್ತರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.ಸಾವಿರ ದಿನಗಳ ಸಂಭ್ರಮಾಚರಣೆ ನಡೆಸುವುದಕ್ಕಿಂತ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವತ್ತ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿದರು.



