ದಾವಣಗೆರೆ: ಕೃತಕ ಬುದ್ಧಿಮತ್ತೆ (AI) ಬಳಸಿ ನಕಲಿ ಚಿರತೆ ಫೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವಾಸನ ಗ್ರಾಮದ ಸುನೀಲ್ (22) ಎಂಬಾತ ನಂದೀಶ್ವರ ಕ್ಯಾಂಪ್ನ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಬಿಂಬಿಸುವ AI ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಎನ್ನಲಾಗಿದೆ. ಈ ಫೋಟೋ ಜಿಲ್ಲಾದ್ಯಂತ ವೈರಲ್ ಆಗಿತ್ತು.
ಫೋಟೋ ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಅಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಫೋಟೋ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಮೂಡಿತ್ತು.
ಈ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ನಡೆಸಿದ ಪೊಲೀಸರು ಸುನೀಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾನು AI ಬಳಸಿ ಫೋಟೋ ಸೃಷ್ಟಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ರೀತಿಯಲ್ಲಿ ಸುಳ್ಳು ಮಾಹಿತಿ ಹಾಗೂ ನಕಲಿ ಫೋಟೋಗಳನ್ನು ಹರಿಬಿಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಬಳಿಕ ಯುವಕನನ್ನು ಕಳುಹಿಸಿದ್ದಾರೆ.



