ನರೇಗಾ ಕೂಲಿ ಎಪ್ರಿಲ್ 1 ರಿಂದ 370 ರೂಪಾಯಿಗೆ ಹೆಚ್ಚಳ: ಜಿ.ಪಂ ಸಿಇಓ ಭರತ್ ಎಸ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025ರ ಎಪ್ರಿಲ್ 1ರಿಂದ ಪ್ರತಿ ದಿನಕ್ಕೆ 370 ರೂ ಕೂಲಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ನಿಗದಿಪಡಿಸಿದೆ. ಈ ಮೂಲಕ ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನೋಪಾಯಕ್ಕೆ ಭದ್ರತೆ ಹೆಚ್ಚಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್ ಹೇಳಿದರು.

Advertisement

ಜಿಲ್ಲಾ ಪಂಚಾಯಿತಿ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು, ಸ್ಥಳೀಯವಾಗಿ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಗ್ರಾ.ಪಂಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ನರೇಗಾ ಯೋಜನೆಯಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ರೂ. 349ರಿಂದ ರೂ. 370ಕ್ಕೆ ಕೂಲಿ ದರವನ್ನು ಹೆಚ್ಚಿಸಿದ್ದು, ಉದ್ಯೋಗ ಚೀಟಿದಾರ ಕೂಲಿಕಾರರು ಈ ಸೌಲಭ್ಯವನ್ನು 2025ರ ಎಪ್ರಿಲ್ 1ರಿಂದ ಪಡೆಯಬಹುದು ಎಂದರು.

ನರೇಗಾ ಯೋಜನೆಯಡಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮಾಡುವುದು ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂನಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಉಪಚಾರದ ಗ್ರಾಮೀಣ ಕೆರೆ ಹೂಳೆತ್ತುವ ಕಾಮಗಾರಿ, ಬದು ನಿರ್ಮಾಣ, ಕೊಳವೆ ಬಾವಿ, ಮರು ಪೂರಣ ಘಟಕ, ನಾಲಾ ಅಭಿವೃದ್ಧಿ, ಅರಣ್ಯೀಕರಣ, ರೇಷ್ಮೆ ಬೆಳೆ, ತೋಟಗಾರಿಕೆ, ಗೋಕಟ್ಟೆ ನಿರ್ಮಾಣದಂತಹ ಇನ್ನೂ ಹಲವು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಯೋಜನೆ ರೂಪಿಸಲಾಗಿದೆ. ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ಕೂಲಿ ಹಣವನ್ನು ಇ-ಎಫ್‌ಎಂಎಸ್ ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ಮುಖ್ಯವಾಗಿ ನರೇಗಾ ಯೋಜನೆಯಡಿ ಐ.ಇ.ಸಿ ಚಟುವಟಿಕೆಗಳ ಮುಖಾಂತರ ಗ್ರಾಮೀಣ ಪ್ರದೇಶಗಳಲ್ಲಿನ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಮಹಿಳೆಯರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಅಗತ್ಯ ಕ್ರಮವಹಿಸಲಾಗಿದೆ. ಎಲ್ಲಾ ಗ್ರಾ.ಪಂಗಳಲ್ಲಿ ಮಾಹಿತಿ, ಶಿಕ್ಷಣ ಮತ್ತು (ಐ.ಇ.ಸಿ) ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೂಲಿಕಾರರನ್ನು ಸಂಘಟಿಸಿ 50 ಕೂಲಿಕಾರರಿರುವ ಕಾರ್ಮಿಕ ಸಂಘಗಳನ್ನು ರಚಿಸಿ ಅದಕ್ಕೆ ಒಬ್ಬ ಕಾಯಕ ಬಂಧುವನ್ನು ನೇಮಿಸಿ ಅವರುಗಳ ಮೂಲಕ ಕೂಲಿ ಬೇಡಿಕೆ ಪಡೆಯಲು ಗ್ರಾ.ಪಂ ವಾರ್ಡ್ಗಳಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ವಿಶೇಷ ಅಭಿಯಾನಗಳನ್ನು ಆಯೋಜಿಸಿ ಕೂಲಿಕಾರರಿಂದ ಕೂಲಿ ಬೇಡಿಕೆ ಪಡೆದು ಸಮಯಕ್ಕೆ ಸರಿಯಾಗಿ ಕೆಲಸ ಒದಗಿಸಲಾಗುವುದು ಎಂದರು.

ಮಹಿಳೆ ಹಾಗೂ ಪುರುಷರಿಗೆ ಸಮಾನ ಕೂಲಿ ನೀಡುವುದರಿಂದ ಸದರಿ ಪ್ರಯೋಜನವನ್ನು ಉದ್ಯೋಗ ಚೀಟಿ ಹೊಂದಿರುವ ಗ್ರಾಮೀಣ ಕುಟುಂಬಗಳು ಪಡೆದುಕೊಳ್ಳುವುದು ಹಾಗೂ ಜಿಲ್ಲೆಯ ಎಲ್ಲಾ ಗ್ರಾ.ಪಂಗಳಲ್ಲಿ ಬೆಸಿಗೆ ಕಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಜನರು ಉದ್ಯೋಗ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅನುಷ್ಠಾನ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

– ಭರತ್ ಎಸ್.

ಜಿ.ಪಂ ಸಿಇಓ.


Spread the love

LEAVE A REPLY

Please enter your comment!
Please enter your name here